ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ಗೆ ಜಾಮೀನು ನೀಡಿರುವ ಹೈಕೋರ್ಟ್ನ ಆದೇಶವು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಹೇಳಿದ್ದಾರೆ.
ಭೂಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.
ಈ ಕುರಿತ ಅರ್ಜಿಯನ್ನು ಜೂನ್ 13ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಚಂಪೈ ಸೊರೇನ್, ‘ಸತ್ಯವು ಹಲವು ತೊಂದರೆಗಳನ್ನು ಎದುರಿಸುತ್ತದೆ. ಆದರೆ, ಸೋಲುವುದಿಲ್ಲ’ ಎಂದು ಹೇಳಿದ್ದಾರೆ. ಇದರೊಂದಿಗೆ ಸತ್ಯಮೇವ ಜಯತೆ ಎಂದು ಘೋಷಣೆಯನ್ನು ಟ್ಯಾಗ್ ಮಾಡುವ ಮೂಲಕ ಹೇಮಂತ್ ಸೊರೇನ್ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.
‘ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇತ್ತು. ಸತ್ಯ ಮೇಲುಗೈ ಸಾಧಿಸಿದೆ. ಜಾರ್ಖಂಡ್ ಹೈಕೋರ್ಟ್ಗೆ ಧನ್ಯವಾದ ಹೇಳಲು ಬಯಸುತ್ತೇನೆ’ ಎಂದು ಜಾರ್ಖಂಡ್ ಸಚಿವ, ಹೇಮಂತ್ ಸೊರೇನ್ ಅವರ ಕಿರಿಯ ಸಹೋದರ ಬಸಂತ್ ಸೊರೇನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.