ADVERTISEMENT

Lateral Entry | ಯಾವುದೇ ಬೆಲೆ ತೆತ್ತಾದರೂ ಸಂವಿಧಾನ, ಮೀಸಲಾತಿಯ ರಕ್ಷಣೆ: ರಾಹುಲ್

ಪಿಟಿಐ
Published 20 ಆಗಸ್ಟ್ 2024, 10:37 IST
Last Updated 20 ಆಗಸ್ಟ್ 2024, 10:37 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು 'ಲ್ಯಾಟರಲ್ ಎಂಟ್ರಿ'ಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ.

ADVERTISEMENT

ಕೇಂದ್ರದ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷೆ ಪ್ರೀತಿ ಸೂದನ್‌ ಅವರಿಗೆ ಬರೆದ ಪತ್ರದಲ್ಲಿ 'ಲ್ಯಾಟರಲ್ ಎಂಟ್ರಿ' ಸಂಬಂಧಿತ ಇತ್ತೀಚಿನ ಜಾಹೀರಾತನ್ನು ರದ್ದು ಮಾಡುವಂತೆ ನಿರ್ದೇಶನ ನೀಡಿದ್ದರು.

'ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯ ರಕ್ಷಣೆ ಮಾಡುತ್ತೇವೆ. 'ಲ್ಯಾಟರಲ್ ಎಂಟ್ರಿ'ಯಂತಹ ಬಿಜೆಪಿಯ ಸಂಚನ್ನು ವಿಫಲಗೊಳಿಸುತ್ತೇವೆ' ಎಂದು ರಾಹುಲ್ ಹೇಳಿದ್ದಾರೆ.

'ಶೇ 50ರ ಮೀಸಲಾತಿ ಮಿತಿಯನ್ನು ತೆರವುಗೊಳಿಸುವ ಮೂಲಕ ನಾವು ಜಾತಿ ಜನಗಣತಿಯ ಆಧಾರದ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಲಿದ್ದೇವೆ' ಎಂದು ರಾಹುಲ್ ಪುನರುಚ್ಚರಿಸಿದ್ದಾರೆ.

ಆಗಸ್ಟ್ 17ರಂದು 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳನ್ನು 'ಲ್ಯಾಟರಲ್ ಎಂಟ್ರಿ' ಮೂಲಕ ನೇಮಕ ಮಾಡಲು ಯುಪಿಎಸ್‌ಸಿ ಅಧಿಸೂಚನೆಯನ್ನು ಹೊರಡಿಸಿತ್ತು.

ಆದರೆ ಸರ್ಕಾರದ ಉನ್ನತ ಹುದ್ದೆಗಳಿಗೆ 'ಲ್ಯಾಟರಲ್ ಎಂಟ್ರಿ' ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣತರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಅಲ್ಲದೆ 'ಲ್ಯಾಟರಲ್ ಎಂಟ್ರಿ' ಕ್ರಮವು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ನಡೆ ಎಂದು ಆರೋಪಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.