ಚೆನ್ನೈ: ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಪ್ರದೇಶಗಳಲ್ಲೂ ಎಡೆಬಿಡದೆ ಮಳೆ ಸುರಿಯುತ್ತಿದೆ.
ಚೆನ್ನೈ ನಗರದ ಹಲವು ಪ್ರದೇಶಗಳಲ್ಲಿ ನೀರು ನಿಂತಿದೆ. ಮಳೆಯಿಂದಾಗಿ ಜನ ಸಾಮಾನ್ಯರಿಗೆ, ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.
1913 ತುರ್ತು ಸಹಾಯವಾಣಿ ಸಂಖ್ಯೆಯನ್ನು ಚೆನ್ನೈ ಕಾರ್ಪೋರೇಷನ್ ಬಿಡುಗಡೆ ಮಾಡಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಮಾಹಿತಿಗಾಗಿ 'ಟಿಎನ್ ಅಲರ್ಟ್ ಆ್ಯಪ್' ಚೆಕ್ ಮಾಡುವಂತೆಯೂ ಸರ್ಕಾರ ಸೂಚಿಸಿದೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈವರೆಗೆ ವಿಮಾನಯಾನ, ರೈಲು ಸಂಚಾರ, ಮೆಟ್ರೊ ರೈಲು ಸಂಚಾರಕ್ಕೆ ತೊಂದರೆಯಾಗಿಲ್ಲ.
ಮಳೆ ಬಾಧಿತ ಪ್ರದೇಶಗಳಿಗೆ ತೆರಳಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪರಿಶೀಲನೆ ನಡೆಸಿದ್ದಾರೆ.
ಮಳೆಯಿಂದಾಗಿ ಸಂಭವನೀಯ ಎಲ್ಲ ಪರಿಸ್ಥಿತಿ ನಿಭಾಯಿಸಲು ಸಿದ್ಧವಿರುವಂತೆ ಸ್ಥಳೀಯ ಆಡಳಿತಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೂಚನೆ ನೀಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ತಮಿಳುನಾಡು ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದೆ.
ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆಂಧ್ರ ಪ್ರದೇಶದ ಕರಾವಳಿ ಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ, ಕೇರಳ ಹಾಗೂ ಮಾಹೆ ಪ್ರದೇಶಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.