ADVERTISEMENT

RG Kar Case: ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಭೇಟಿಯಾಗಲಿರುವ ಮಮತಾ

ಪಿಟಿಐ
Published 21 ಅಕ್ಟೋಬರ್ 2024, 10:35 IST
Last Updated 21 ಅಕ್ಟೋಬರ್ 2024, 10:35 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

(ಪಿಟಿಐ ಚಿತ್ರ)

ಕೋಲ್ಕತ್ತ(ಪಶ್ಚಿಮ ಬಂಗಾಳ): ಇಲ್ಲಿನ ಆರ್‌.ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಣಾಂತ ಉಪವಾಸ ನಡೆಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಸೋಮವಾರ) ಸಂಜೆ ಭೇಟಿ ಮಾಡಲಿದ್ದಾರೆ.

ADVERTISEMENT

ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೋಬರ್ 22 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಿರಿಯ ವೈದ್ಯರು ಶನಿವಾರ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವಾಲಯ ನಬನ್ನಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.

ಮೃತ ವೈದ್ಯ ವಿದ್ಯಾರ್ಥಿನಿಗೆ ನ್ಯಾಯಾಕ್ಕಾಗಿ ಹಾಗೂ ಕೆಲಸದ ಸ್ಥಳದಲ್ಲಿ ಭದ್ರತೆಗಾಗಿ ಆಗ್ರಹಿಸಿ ಕಿರಿಯ ವೈದ್ಯರು ಅಕ್ಟೋಬರ್ 5ರಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದು, ಸೋಮವಾರ 17ನೇ ದಿನಕ್ಕೆ ಕಾಲಿರಿಸಿದೆ.

ಧರಣಿ ನಿರತ 6 ಮಂದಿ ವೈದ್ಯರ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದಂತೆ 8 ಮಂದಿ ವೈದ್ಯರು ಅನಿರ್ದಿಷ್ಟಾವಧಿ ಉಪವಾಸ ಮುಂದುವರೆಸಿದ್ದಾರೆ.

ಪ್ರತಿಭಟನಾ ನಿರತರ ಬೇಡಿಕೆಗಳೇನು?

ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸುವುದು, ಕೆಲಸದ ಸ್ಥಳಗಳಲ್ಲಿ ಸಿಸಿಟಿವಿ, ಆನ್-ಕಾಲ್ ಕೊಠಡಿಗಳು ಮತ್ತು ಶೌಚಾಲಯಗಳು ಸೇರಿ ಅಗತ್ಯ ಸೌಲಭ್ಯಗಳನ್ನು ಖಚಿತಪಡಿಸಲು ಕಾರ್ಯಪಡೆಗಳನ್ನು ರಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಅಲ್ಲದೇ ಆಸ್ಪತ್ರೆಗಳಲ್ಲಿ ಹೆಚ್ಚಿನ ಪೊಲೀಸ್ ರಕ್ಷಣೆ, ವೈದ್ಯರು, ನರ್ಸ್‌ಗಳು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆಯೂ ಅವರು ಆಗ್ರಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.