ನವದೆಹಲಿ: ಪರಿಶಿಷ್ಟರು, ಹಿಂದುಳಿದವರು ಹಾಗೂ ಬುಡಕಟ್ಟು ಜನರ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಈ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದೇ ಎಂದು ವಿರೋಧ ಪಕ್ಷ ಕಾಂಗ್ರೆಸ್ ಗುರುವಾರ ಪ್ರಶ್ನಿಸಿದೆ.
ಒಂದು ವೇಳೆ, ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದಲ್ಲಿ, ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರವು ಬಿಹಾರ ಸರ್ಕಾರದ ನಡೆಯನ್ನು ಸಂಪೂರ್ಣವಾಗಿ ಬೆಂಬಲಿಸುವುದೇ ಎಂದೂ ಕೇಳಿದೆ.
‘ಕಳೆದ ವರ್ಷ ಬಿಹಾರ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾಯ್ದೆಯನ್ನು ಪಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನಿಗದಿ ಮಾಡಿದ ಶೇ 50ರಷ್ಟು ಮಿತಿಯನ್ನು ರಾಜ್ಯ ಸರ್ಕಾರದ ನಿರ್ಧಾರ ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಹೇಳಿದೆ. ಹೀಗಾಗಿ, ಈ ವಿಚಾರವಾಗಿ ಬಿಹಾರ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದೇ? ಈ ಮನವಿಗೆ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಬೆಂಬಲ ನೀಡುವುದೇ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೇಳಿದ್ದಾರೆ.
‘ಈ ವಿಷಯ ಕುರಿತು ಆದಷ್ಟು ಶೀಘ್ರವೇ ಚರ್ಚೆ ನಡೆಸುವುದಕ್ಕೆ ಸಂಸತ್ನಲ್ಲಿ ಅವಕಾಶ ಸಿಗಬಹುದೇ’ ಎಂದೂ ಅವರು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.