ಬೆಂಗಳೂರು: ‘ಆರ್ಥಿಕವಾಗಿ ದುರ್ಬಲವಾದ ಸಮುದಾಯಗಳ ಮೀಸಲಾತಿಗಾಗಿ ಸಂವಿಧಾನಕ್ಕೆ ತರಲಾದ 103ನೇ ತಿದ್ದುಪಡಿ ಅನುಸಾರ ಮೀಸಲಾತಿ ಜಾರಿಗೊಳಿಸಲು ಸರ್ಕಾರಗಳಿಗೆ ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ವಕೀಲ ಗಿರೀಶ್ ಭಾರಧ್ವಾಜ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜೆ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಂ.ಅರುಣ್ ಶ್ಯಾಮ್ ವಾದ ಆಲಿಸಿದ ನ್ಯಾಯಪೀಠ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಕೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
‘ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದು, ತಕ್ಷಣ ಮೀಸಲಾತಿ ಸೌಲಭ್ಯಗಳು ಜಾರಿಯಾಗುವಂತೆ ಸರ್ಕಾರಗಳಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.