ADVERTISEMENT

ಮಂಡ್ಯ ಸಮ್ಮೇಳನಕ್ಕೆ ₹25 ಕೋಟಿಗೆ ಶಿಫಾರಸು: ಸಚಿವ ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 15:47 IST
Last Updated 23 ಅಕ್ಟೋಬರ್ 2024, 15:47 IST
ಚಲುವರಾಯಸ್ವಾಮಿ
ಚಲುವರಾಯಸ್ವಾಮಿ   

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ₹25 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಶಿಫಾರಸು ಮಾಡಲಾಗಿದ್ದು, ಇದರ ಇತಿಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಡ್ಯ ಜಿಲ್ಲೆಯ ಸೊಗಡಿನ ಜತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರಲ್ಲಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸಂಘ– ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ, ಸಿಬ್ಬಂದಿ ಹೆಚ್ಚಿನ ಕಾಳಜಿ ಮತ್ತು ಪರಿಶ್ರಮ ವಹಿಸಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ವ್ಯಾಪಕ ಪ್ರಚಾರ, ಉತ್ತಮ ಅಲಂಕಾರ ಮಾಡಬೇಕು. ಆಕರ್ಷಕ ಮೆರವಣಿಗೆ, ಅರ್ಥಪೂರ್ಣ ವಿಚಾರಗೋಷ್ಠಿ, ಕಾರ್ಯಕ್ರಮಗಳು, ಮುದ್ದೆ–ಬಸ್ಸಾರು ಸೇರಿದಂತೆ ಸ್ಥಳೀಯ ಆಹಾರ ಹಾಗೂ ಉತ್ತರ ಕರ್ನಾಟಕದ ತಿನಿಸುಗಳ ಸಮ್ಮಿಶ್ರ ಊಟೋಪಚಾರ ವ್ಯವಸ್ಥೆ ಮಾಡುವಂತೆಯೂ ಅವರು ಸಲಹೆ ನೀಡಿದರು.

ಸಾಹಿತ್ಯ ಸಮ್ಮೇಳನದ ಮೊದಲೆರಡು ದಿನ ಸಂಜೆಯ ನಂತರ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಸಮ್ಮೇಳನಕ್ಕೆ ವಿಶೇಷ ಬಸ್‌ ಸಂಪರ್ಕ ವ್ಯವಸ್ಥೆ ಮಾಡಬೇಕು ಎಂದೂ ಅವರು ಹೇಳಿದರು.

ಸಭೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿಯ ಅಧ್ಯಕ್ಷ ರಮೇಶ್‌ ಬಂಡಿಸಿದ್ಧೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಉದಯ್‌ಗೌಡ, ದರ್ಶನ್‌ ಪುಟ್ಟಣ್ಣಯ್ಯ, ವಿಧಾನಪರಿಷತ್‌ ಸದಸ್ಯರಾದ ಮಧುಮಾದೇಗೌಡ, ದಿನೇಶ್‌ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್‌  ಅಧ್ಯಕ್ಷ  ಮಹೇಶ್‌ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್‌ ಆಸಿಫ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.