ADVERTISEMENT

2 ವರ್ಷದಿಂದ ಗುತ್ತಿಗೆದಾರರ ₹31 ಸಾವಿರ ಕೋಟಿ ಬಿಲ್‌ ಬಾಕಿ: ಪ‍್ರತಿಭಟನೆ ಎಚ್ಚರಿಕೆ

ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 11:01 IST
Last Updated 21 ಅಕ್ಟೋಬರ್ 2024, 11:01 IST
<div class="paragraphs"><p>ಹಣ </p></div>

ಹಣ

   

ಬೆಂಗಳೂರು: ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿದರೂ ಎರಡು ವರ್ಷಗಳಿಂದ ಗುತ್ತಿಗೆದಾರರ ₹ 31 ಸಾವಿರ ಕೋಟಿ ಮೊತ್ತದ ಬಿಲ್‌ ಬಾಕಿ ಉಳಿಸಿಕೊಳ್ಳಲಾಗಿದೆ. ಒಂದು ತಿಂಗಳೊಳಗೆ ಒಟ್ಟು ಬಿಲ್‌ ಮೊತ್ತದ ಶೇಕಡ 50ರಷ್ಟು ಹಣ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜಗನ್ನಾಥ್ ಬಿ. ಶೇಗಜಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ₹31 ಸಾವಿರ ಬಿಲ್‌ ಮೊತ್ತವನ್ನು ಒಂದೇ ಬಾರಿಯಲ್ಲದಿದ್ದರೂ ಹಂತ–ಹಂತವಾಗಿ ಬಿಡುಗಡೆ ಮಾಡಬೇಕಿತ್ತು. ಕೆಲ ಇಲಾಖೆಗಳಲ್ಲಿ ಶೇಕಡ 7ರಿಂದ 15ರಷ್ಟು ಬಿಲ್‌ ಮೊತ್ತವನ್ನು ಪಾವತಿಸುತ್ತಿವೆ. ಕೆಲ ಇಲಾಖೆಗಳಲ್ಲಿ ತಮಗೆ ಬೇಕಾದ ಪ್ರಭಾವಿ ಗುತ್ತಿಗೆದಾರರಿಗೆ ಮಾತ್ರ ಬಾಕಿ ಮೊತ್ತ ಪಾವತಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಇಲಾಖೆ ಉಸ್ತುವಾರಿ ಹೊಂದಿರುವ ಸಚಿವರೊಂದಿಗೆ ಮಾತನಾಡಿ ಎಂಬ ಹೇಳಿಕೆ ನೀಡುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ಯಾವುದೇ ಇಲಾಖೆಯಲ್ಲಿ ಜೇಷ್ಠತೆಯನ್ನು ಪಾಲಿಸುತ್ತಿಲ್ಲ. ಸಣ್ಣ ನೀರಾವರಿ, ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಬಿಬಿಎಂಪಿ ಉಸ್ತುವಾರಿ ವಹಿಸಿಕೊಂಡಿರುವ ಉಪಮುಖ್ಯಮಂತ್ರಿ, ಆಯಾ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ಕೂಡಲೇ ಸಭೆ ಕರೆದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಬೇಕು’ ಎಂದು ಒತ್ತಾಯಿಸಿದರು.

‘ಮೂರು ಮತ್ತು ನಾಲ್ಕನೇ ದರ್ಜೆಯ ಗುತ್ತಿಗೆದಾರರು ಹಣವನ್ನು ಬ್ಯಾಂಕ್‌, ಖಾಸಗಿ ಲೇವಾದೇವಿಗಾರರು ಮತ್ತು ಆಸ್ತಿ ಅಡವಿಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಬಿಲ್‌ ಮೊತ್ತ ಪಾವತಿಯಾಗದ ಕಾರಣ ಗುತ್ತಿಗೆದಾರರು ಊರು ಬಿಟ್ಟು ಹೋಗಿದ್ದಾರೆ. ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ಓಡಾಡುತ್ತಿದ್ದಾರೆ’ ಎಂದು ಹೇಳಿದರು.

‘ಯಾವುದೇ ಸರ್ಕಾರಗಳು ಅಧಿಕಾರದಲ್ಲಿದ್ದಾಗ ದಸರಾ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಬಾಕಿ ಬಿಲ್‌ ಬಿಡುಗಡೆಗೊಳಿಸಲಾಗುತ್ತಿತ್ತು. ಆದರೆ, ಈಗಿನ ಸರ್ಕಾರ ಇದುವರೆಗೂ ಯಾವುದೇ ಬಾಕಿ ಬಿಲ್‌ ಬಿಡುಗಡೆಗೊಳಿಸಿಲ್ಲ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.