ADVERTISEMENT

ರಾಜಕಾಲುವೆ ಅತಿಕ್ರಮಣ ತೆರವಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:53 IST
Last Updated 26 ಅಕ್ಟೋಬರ್ 2024, 15:53 IST
<div class="paragraphs"><p>ಸಿದ್ದರಾಮಯ್ಯ </p></div>

ಸಿದ್ದರಾಮಯ್ಯ

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜಕಾಲುವೆಗಳ ಅತಿಕ್ರಮಣ ತೆರವು ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ADVERTISEMENT

‘ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 14 ಸಾವಿರ ಗುಂಡಿ ಮುಚ್ಚಿದ್ದೇವೆ. ಮುಚ್ಚಿದ ಬಳಿಕ ಮತ್ತಷ್ಟು ಮಳೆ ಬಂದಿದ್ದರಿಂದ ಮತ್ತೆ ಗುಂಡಿ ಬಿದ್ದಿವೆ. ಅದನ್ನೂ ಮುಚ್ಚಲು ಸೂಚನೆ ನೀಡಲಾಗಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ರಾಜಕಾಲುವೆಗಳ ಒತ್ತುವರಿ ತೆರವು, ತಡೆಗೋಡೆ ನಿರ್ಮಾಣಕ್ಕೆ ಆದೇಶ ನೀಡಿದ್ದೆ. ಆದರೆ, ಈ ಕಾರ್ಯ ಇನ್ನೂ ಪೂರ್ಣಗೊಳ್ಳದ ಕಾರಣ ಪ್ರತಿವರ್ಷ ಮಳೆ ಬಂದ ತಕ್ಷಣ ಅನಾಹುತಗಳು ಸಂಭವಿಸುತ್ತಿವೆ’ ಎಂದರು. 

‘ಅಕ್ಟೋಬರ್‌ನಲ್ಲಿ ಈವರೆಗೆ 275 ಮಿ.ಮೀ. ಮಳೆಯಾಗಿದ್ದು, 2005ರಲ್ಲಿ ಇದೇ ಅವಧಿಯಲ್ಲಿ 407 ಮೀ.ಮೀ. ಮಳೆ ಆಗಿತ್ತು’ ಎಂದರು.

‘ಬೆಂಗಳೂರು ನಗರದಲ್ಲಿ ಬಾಕಿ ಇರುವ 173 ಕಿ.ಮೀ ರಾಜಕಾಲುವೆ ನಿರ್ಮಾಣ ಮಾಡಲು ₹ 2,000 ಕೋಟಿ ನೆರವು ನೀಡಲು ವಿಶ್ವಸಂಸ್ಥೆ ಒಪ್ಪಿಕೊಂಡಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನಾ ವರದಿಗೆ ಒಪ್ಪಿಗೆ ಪಡೆಯಲಾಗುವುದು. ಟೆಂಡರ್‌ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ ಮುಂದಿನ ವರ್ಷದ ಆರಂಭದ ಒಳಗಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಅತಿವೃಷ್ಟಿ ನಿರ್ವಹಣೆಗೆ ಎಂಟು ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರ ವತಿಯಿಂದ ರಾಜಕಾಲುವೆಗಳ ಕಿರು ಸೇತುವೆಗಳ ವಿಸ್ತರಣೆ ಮತ್ತು ಕೆರೆಗಳ ಅಭಿವೃದ್ಧಿಗೆ ₹ 275 ಕೋಟಿ ಕ್ರಿಯಾ ಯೋಜನೆ ಅನುಮೋದನೆ ನೀಡಲಾಗಿದೆ. ಕೆರೆಗಳಿಗೆ ₹ 50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ₹ 669 ಕೋಟಿ ಪ್ರಸ್ತಾವ ಸಿದ್ಧಪಡಿಸಲಾಗಿದೆ’ ಎಂದರು.

‘ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ₹ 175 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲು ಸೂಚನೆ ನೀಡಲಾಗಿದೆ. ತೂಬು ಕಾಲುವೆಗೆ ₹ 85 ಕೋಟಿ, ಬೆಂಗಳೂರು ನಗರ ರಸ್ತೆ ನಿರ್ಮಾಣಕ್ಕೆ ₹ 165 ಕೋಟಿ ಪ್ರಸ್ತಾವ ಸಿದ್ದಪಡಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.