ADVERTISEMENT

ದರ್ಶನ್‌ ರೀತಿ ಕೈದಿಗಳೆಲ್ಲಾ ಮನೆ ಊಟವೇ ಬೇಕೆಂದರೆ ಹೇಗೆ: ಪ್ರಾಸಿಕ್ಯೂಷನ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 14:39 IST
Last Updated 19 ಜುಲೈ 2024, 14:39 IST
   

ಬೆಂಗಳೂರು: ‘ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು ಎಂದು ಕೋರಿರುವ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ತಮ್ಮ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಸಲ್ಲಿಸಲಿ’ ಎಂದು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಜೈಲಿನಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ದರ್ಶನ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ ಅವರು, ‘ಕರ್ನಾಟಕ ಬಂದಿಖಾನೆ ಕಾಯ್ದೆ–1963ರ ಕಲಂ 30ರ ಅಡಿ ವಿಚಾರಣಾಧೀನ ಕೈದಿ ಮನೆ ಊಟ, ಹಾಸಿಗೆ ಇತ್ಯಾದಿ ಪಡೆಯಲು ಅರ್ಹರಾಗಿರುತ್ತಾರೆ. ದರ್ಶನ್ ಅವರಿಗೆ ಸದ್ಯ ಜೈಲಿನ ಊಟದಿಂದ ಆರೋಗ್ಯದಲ್ಲಿ ವ್ಯತ್ಯಯವುಂಟಾಗಿದೆ. ಹಾಗಾಗಿ, ಅವರಿಗೆ ಮನೆ ಊಟ ಪಡೆಯಲು ನಿರ್ದೇಶಿಸಬೇಕು. ಕೈದಿಯು ತನಗೆ ಬೇಕಾದ ಊಟ ಪಡೆಯುವುದು ಆತನ ಮೂಲಭೂತ ಹಕ್ಕು‘ ಎಂದು ಪ್ರತಿಪಾದಿಸಿದರು.

ADVERTISEMENT

ಇದಕ್ಕೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿ.ಜಿ.ಭಾನುಪ್ರಕಾಶ್‌ ಹಾಗೂ ಮತ್ತೊಬ್ಬ ವಿಶೇಷ ಪ್ರಾಸಿಕ್ಯೂಟರ್‌ ಪಿ.ಪ್ರಸನ್ನಕುಮಾರ್, ‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 5 ಸಾವಿರ ಕೈದಿಗಳಿದ್ದಾರೆ. ಅವರೆಲ್ಲರೂ ಇದೇ ರೀತಿ ಕೇಳುತ್ತಾ ಹೋದರೆ ಏನು ಮಾಡುವುದು. ಅಷ್ಟಕ್ಕೂ ಕೈದಿಗಳಿಗೆ ಸರ್ಕಾರ ಉತ್ತಮವಾದ ಪೌಷ್ಟಿಕ ಆಹಾರವನ್ನೇ ನೀಡುತ್ತಿದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ‘ಅರ್ಜಿದಾರರು ಮೊದಲಿಗೆ ಈ ಮನವಿಯನ್ನು  ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಿ. ತುರ್ತಿದ್ದರೆ ನಾಳೆಯೇ ಅರ್ಜಿ ಸಲ್ಲಿಸಬಹುದು. ಇದಕ್ಕೆ ಪ್ರಾಸಿಕ್ಯೂಷನ್‌ ಇದೇ 22ರಂದು ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಲಾಗುವುದು’ ಎಂದರು. ಅಂತೆಯೇ, ‘ಈ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಇದೇ 27ರ ಒಳಗೆ ಪರಿಶೀಲಿಸಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.