ಬೆಂಗಳೂರು: ‘ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೇರೆ ಕಡೆ ತಿರುಗಿಸಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಫೋನ್ ಕದ್ದಾಲಿಕೆ ವಿಚಾರ ಪ್ರಸ್ತಾಪಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರಿದರು.
ಸುದ್ದಿಗಾರರ ಜತೆ ಬುಧವಾರ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ನಮ್ಮ ಕುಟುಂಬದ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಯಲ್ಲಿ ಸತ್ಯವಿಲ್ಲ. ಅಂತಹ ಕೆಲಸವನ್ನು ಸರ್ಕಾರ ಮಾಡಿಲ್ಲ. ಹಿಂದೆ ಮುಖ್ಯಮಂತ್ರಿಯಾದಾಗಲೂ, ಈಗಲೂ ಮಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಇಲ್ಲಿಯವರೆಗೂ ಇಂತಹ ನೀಚತನಕ್ಕೆ ಅವಕಾಶ ನೀಡಿಲ್ಲ’ ಎಂದರು.
‘ನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರು ಅಧಿಕಾರದಲ್ಲಿ ಇದ್ದಾಗ ಯಾವ ರೀತಿ ಪ್ರಕರಣ ನಡೆದಿತ್ತು. ಏನೆಲ್ಲ ಆಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅಂತಹ ಅನುಮಾನವಿದ್ದರೆ ದೂರು ನೀಡಲಿ. ಯಾರೆಲ್ಲ ಮಾಹಿತಿ ನೀಡಿದ್ದಾರೆ ಎನ್ನುವ ಕುರಿತು ಅಫಿಡವಿಟ್ ಸಲ್ಲಿಸಲಿ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅವರು ಕೂಡ ಗೃಹ ಸಚಿವರಾಗಿದ್ದವರು. ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು. ಅವರೆಲ್ಲ ದೂರು ಕೊಡಲಿ’ ಎಂದು ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.