ಬೆಂಗಳೂರು: ಚಿತ್ರದುರ್ಗದಲ್ಲಿ ಜುಲೈ 27ರಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದೀಕ್ಷಾ ರಜತಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ದೀಕ್ಷಾ ರಜತಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ದೇಶದ ಎಲ್ಲೆಡೆ ನೆಲೆಸಿರುವ ಸಮಾಜದ ಜನರು ಭಾಗವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಮಂತ್ರಾಲಯದ ಸುಭುದೇಂದ್ರ ತೀರ್ಥರು ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಭೋವಿ ಸಮಾಜ ಸಂಘಟನೆಯಾಗಿದೆ. ಏಳು ಶಾಸಕರು, ಒಬ್ಬ ಸಂಸದರು ಇದ್ದಾರೆ. ರಾಷ್ಟ್ರಮಟ್ಟದಲ್ಲಿ ಸಮಾಜವನ್ನು ಸಂಘಟಿಸಲು ಶ್ರಮಿಸಲಾಗುತ್ತಿದೆ. ಹಲವರು ಉನ್ನತ ಹುದ್ದೆಯಲ್ಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ ಸೇರಿದಂತೆ ಉತ್ತಮ ಅಂಕ ಗಳಿಸಿದ ಸಮಾಜದ ಮಕ್ಕಳೂ ಸೇರಿದಂತೆ ಎಲ್ಲ ಸಾಧಕರನ್ನೂ ಅಂದು ಸನ್ಮಾನಿಸಲಾಗುತ್ತಿದೆ ಎಂದರು.
ಸಮಾಜಕ್ಕೆ ಭೋವಿ ಸಮುದಾಯದ ಕೊಡುಗೆ ಅಪಾರ. ಕೆರೆ, ಕಟ್ಟೆ, ಬಾವಿ, ಗುಡಿ, ಗೋಪುರ ಕಟ್ಟಿದ್ದು ಸಮಾಜದ ಹಿರಿಯರು. ಆದರೆ, ಸಮಾಜದ ಜನರು ಇಂದಿಗೂ ಸಂಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೋವಿ ಗುರುಪೀಠ ಏರಿದ ನಂತರ ಜನರ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಸುದ್ದಿಗೋಷ್ಠಿಯಲ್ಲಿ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ಸಮಾಜದ ಮುಖಂಡರಾದ ರಾಮಪ್ಪ, ನಾಗರಾಜ್, ದುರ್ಗಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.