ADVERTISEMENT

ಪರಿಶಿಷ್ಟರಲ್ಲಿ ಕೆನೆಪದರ: ಬಿಜೆಪಿ ಸಂಸದರ ವಿರೋಧ

ಪ್ರಧಾನಿಗೆ ಸಂಸದರ ನಿಯೋಗದಿಂದ ಮನವಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 16:13 IST
Last Updated 9 ಆಗಸ್ಟ್ 2024, 16:13 IST
ಬಿಜೆಪಿ ಸಂಸದರ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿತು. 
ಬಿಜೆಪಿ ಸಂಸದರ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿತು.     

ನವದೆಹಲಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಲ್ಲಿ ಕೆನೆಪದರಕ್ಕೆ ಸೇರಿದವರನ್ನು ಗುರುತಿಸಬಾರದು ಎಂದು ಬಿಜೆಪಿ ಸಂಸದರ ನಿಯೋಗವು ‍ಪ್ರಧಾನಿ ಅವರಿಗೆ ಮನವಿ ಮಾಡಿದೆ. 

ಎಸ್‌ಸಿ, ಎಸ್‌ಟಿಗಳಲ್ಲಿ ಕೆನೆಪದರಕ್ಕೆ ಸೇರಿದವರನ್ನು ಗುರುತಿಸಲು ಮತ್ತು ಅವರಿಗೆ ಮೀಸಲಾತಿಯ ಸೌಲಭ್ಯವನ್ನು ನಿರಾಕರಿಸಲು ರಾಜ್ಯ ಸರ್ಕಾರಗಳು ನೀತಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್‌ ಆಗಸ್ಟ್‌ 1ರಂದು ಹೇಳಿತ್ತು. 

ಪರಿಶಿಷ್ಟ ಜಾತಿಗಳ ಒಳವರ್ಗೀಕರಣದ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಕೋರ್ಟ್‌ ಹೇಳಿತ್ತು.

ADVERTISEMENT

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಸದರ ನಿಯೋಗವು, ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಕಳವಳ ವ್ಯಕ್ತಪಡಿಸಿತು. 

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ, ‘ಪ್ರಧಾನಿ ಅವರು ಭೇಟಿಯಾಗಿ ಒಳಮೀಸಲಾತಿ ವಿಷಯವಾಗಿ ಚರ್ಚೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರ ಬಗ್ಗೆ ಸಾಂದರ್ಭಿಕವಾಗಿ ಪ್ರಸ್ತಾಪ ಇದೆ. ಅದನ್ನು ಜಾರಿ ಮಾಡಿದರೆ ಪರಿಶಿಷ್ಟರಿಗೆ ಅನ್ಯಾಯವಾಗಲಿದೆ ಎಂಬುದನ್ನು ಪ್ರಧಾನಿಯವರ ಗಮನಕ್ಕೆ ತಂದಿದ್ದೇವೆ‘ ಎಂದರು.

‘ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಕೆನೆಪದರ ವ್ಯವಸ್ಥೆ ರೂಪಿಸುವುದಿಲ್ಲ ಎಂದು ಪ್ರಧಾನಿ ಅಭಯ ನೀಡಿದ್ದಾರೆ. ಒಬ್ಬ ವೈದ್ಯ ಬಾಡಿಗೆ ಮನೆ ಕೇಳಲು ಹೋದರೆ ಜಾತಿ ಕೇಳುತ್ತಾರೆ ಹಾಗೂ ಜಾತಿ ಗೊತ್ತಾದ ಮೇಲೆ ಮನೆ ಕೊಡುವುದಿಲ್ಲ ಎಂದು ಪ್ರಧಾನಿ ಬೇಸರದಿಂದ ಹೇಳಿದ್ದಾರೆ. ನಮ್ಮ ಪಕ್ಷ ಕೆನೆಪದರದ ಪರವಾಗಿ ಇಲ್ಲ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ’ ಎಂದರು. 

ಬಿಜೆಪಿಯ ರಾಜ್ಯಸಭಾ ಸದಸ್ಯ ಸಿಕಂದರ್ ಕುಮಾರ್ ಮಾತನಾಡಿ, ‘ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಅನೇಕ ಮಂದಿ ನಮಗೆ ನಿತ್ಯ ಕರೆ ಮಾಡುತ್ತಿದ್ದಾರೆ. ಇದನ್ನು ಪ್ರಧಾನಿಯವರಿಗೆ ಮನವರಿಕೆ ಮಾಡಿದ್ದೇವೆ. ಕೆನೆಪದರ ಜಾರಿಗೊಳಿಸುವುದಿಲ್ಲ ಎಂದು ಅವರು ಭರವಸೆ ಕೊಟ್ಟಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.