ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ವಿಧಾನ ಪರಿಷತ್ ನ ಬಿಜೆಪಿ ಸದಸ್ಯ ಸಿ.ಪಿ. ಯೋಗೇಶ್ವರ್ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿದ್ದಾರೆ. ಸಭಾಪತಿಯವರನ್ನು ಖುದ್ದಾಗಿ ಭೇಟಿಯಾಗಿ ರಾಜೀನಾಮೆ ಸಲ್ಲಿಸುವುದಕ್ಕಾಗಿ ಯೋಗೇಶ್ವರ್ ಅವರು ವಿಮಾನದಲ್ಲಿ ಹುಬ್ಬಳ್ಳಿಯತ್ತ ತೆರಳುತ್ತಿದ್ದಾರೆ.
'ಯೋಗೇಶ್ವರ್ ಅವರು ಭೇಟಿಗೆ ಸಮಯ ಕೋರಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ 3.30ಕ್ಕೆ ಭೇಟಿಯಾಗುವಂತೆ ತಿಳಿಸಿದ್ದೇನೆ. ವಿಮಾನದಲ್ಲಿ ಹುಬ್ಬಳ್ಳಿಗೆ ಬರುತ್ತಿರುವುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ' ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
'ಯೋಗೇಶ್ವರ್ ಕಾಂಗ್ರೆಸ್ ನಾಯಕರನ್ನು ಭೇಟಿಮಾಡಿದ್ದಾರೆ' ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಅಲ್ಲಗಳೆದಿರುವ ಅವರು, 'ಕುಮಾರಸ್ವಾಮಿ ಅವರಿಗೆ ತಮ್ಮ ಮಗನಿಗೇ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಕೊಡಬೇಕೆಂಬ ಆಸೆ ಇದ್ದರೆ ಕೊಡಲಿ. ಅದಕ್ಕಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡುವುದು ಬೇಡ. ಅವರನ್ನು ಬಲವಂತ ಮಾಡಿ ಟಿಕೆಟ್ ಕಿತ್ತುಕೊಳ್ಳಲು ಸಾಧ್ಯವಿಲ್ಲ' ಎಂದರು.
ಸೋಮವಾರ ಮಧ್ಯಾಹ್ನ ಹುಬ್ಬಳ್ಳಿಗೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವಂತೆ ಸ್ಪಷ್ಟವಾಗಿ ಯಾರಿಂದಲೂ ನನಗೆ ಕೋರಿಕೆ ಬಂದಿಲ್ಲ. ಕ್ಷೇತ್ರದ ಜನರು ಕೂಡ ಅಂತಹ ಪ್ರಯತ್ನ ಬೇಡ ಎಂದಿದ್ದಾರೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂದು ಬಯಸಿದ್ದೇನೆ. ಆದರೆ, ಯಾರೂ ನನಗೆ ಬೆಂಬಲ ಕೊಡುತ್ತಿಲ್ಲ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.