ಬೆಂಗಳೂರು: ಲೋಕಸಭಾ ಚುನಾವಣಾ ತಯಾರಿ ಮತ್ತು ಪಕ್ಷ ಸಂಘಟನೆಗಾಗಿ ಬಿಜೆಪಿ ರೈತ ಮೋರ್ಚಾ ಸೋಮವಾರ ರಾಜ್ಯದಾದ್ಯಂತ ‘ಗ್ರಾಮ ಪರಿಕ್ರಮ ಯಾತ್ರೆ’ಗೆ ಚಾಲನೆ ನೀಡಲಿದೆ ಎಂದು ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಾದ್ಯಂತ ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಯಾತ್ರೆಗೆ ಚಾಲನೆ ನೀಡುವರು. ಅದೇ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ 32 ಸಂಘಟನಾತ್ಮಕ ಜಿಲ್ಲೆಗಳಲ್ಲೂ ಚಾಲನೆ ದೊರಕಲಿದೆ’ ಎಂದರು.
ರಾಜ್ಯದಲ್ಲೂ ಯಾತ್ರೆ ನಡೆಸುವಂತೆ ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರಾಜ್ಕುಮಾರ್ ಚಾಹರ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಬೃಹತ್ ನಗರಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆಗಳಲ್ಲೂ ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪಕ್ಷದ ಚುನಾಯಿತ ಪ್ರತಿನಿಧಿಗಳು, ರೈತ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಪ್ರಮುಖ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಒಂದು ತಿಂಗಳ ಕಾಲ, ದಿನವೊಂದಕ್ಕೆ ಐದು ಹಳ್ಳಿಗಳಿಗೆ ಭೇಟಿ ನೀಡಲಾಗುವುದು. ಅಲ್ಲಿನ ಸಮಸ್ಯೆಗಳು ಮತ್ತು ಜನರ ಅಹವಾಲುಗಳ ಕುರಿತು ಮಾಹಿತಿ ಸಂಗ್ರಹಿಸಿ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷರಿಗೆ ರವಾನಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.