ಬೆಂಗಳೂರು: ಪಕ್ಷವನ್ನು ಸದೃಢವಾಗಿ ಕಟ್ಟುವ ಮೂಲಕ ಕರ್ನಾಟಕವನ್ನು ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲಾಗಿಸಲು ಶ್ರಮಿಸುವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನುಮ ದಿನದ ಅಂಗವಾಗಿ ಮಂಗಳವಾರ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸರ್ವತೋಮುಖ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ. ರಾಜ್ಯದಲ್ಲೂ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಪತನದ ಹಾದಿ ಸನ್ನಿಹಿತವಾಗಿದೆ ಎಂದರು.
ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿ ಇದ್ದಾಗ ಭ್ರಷ್ಟಾಚಾರಕ್ಕೆ ಹೆಸರಾಗಿತ್ತು. ಮೋದಿ ಪ್ರಧಾನಿಯಾದ ಒಂದು ದಶಕದಲ್ಲಿ ದೇಶದ ಚಿತ್ರಣವೇ ಬದಲಾಗಿದೆ. ಕಿಸಾನ್ ಸಮ್ಮಾನ್ ನಿಧಿ, ರಸ್ತೆ ಸಂಪರ್ಕ ಜಾಲದ ಅಭಿವೃದ್ಧಿ, ಬೆಂಗಳೂರು ಮೆಟ್ರೊ ಸಂಪರ್ಕ, ರೈಲು ಮಾರ್ಗಗಳ ಅಭಿವೃದ್ಧಿ ಸೇರಿ ವಿವಿಧ ಯೋಜನೆಗಳಿಗೆ ಗರಿಷ್ಠ ಹಣವನ್ನು ರಾಜ್ಯಕ್ಕೆ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನುಮ ದಿನದ ಅಂಗವಾಗಿ ರಾಜ್ಯದ ಹಲವೆಡೆ 20 ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು. ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.