ಚಾಮರಾಜನಗರ: ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಲಭ್ಯವಾಗದೆ ಮೃತಪಟ್ಟವರ ಕುಟುಂಬಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಉದ್ಯೋಗ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ನಗರದಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಯಾರೂ ದಯಾಮರಣ ಕೇಳಬಾರದು. ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದೇನೆ ಎಂದರು.
ಜಿಲ್ಲಾಧಿಕಾರಿ ಸಭೆ:
ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಂತ್ರಸ್ತರೊಂದಿಗೆ ಸಭೆ ನಡೆಸಿ ಸಿಮ್ಸ್ನಲ್ಲಿ (ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧನಾ ಆಸ್ಪತ್ರೆ) ತಾತ್ಕಾಲಿಕ ನೌಕರಿ ನೀಡುವಂತೆ ಸರ್ಕಾರದಿಂದ ಸೂಚನೆ ಬಂದಿದ್ದು ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದರು.
ಆದರೆ, ಜಿಲ್ಲಾಡಳಿತದ ಪ್ರಸ್ತಾವಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂತ್ರಸ್ತರು ‘ನಮ್ಮವರನ್ನು ಕಳೆದುಕೊಂಡ ಆಸ್ಪತ್ರೆ ವಾತಾವರಣದಲ್ಲಿ ಕೆಲಸ ಮಾಡಲು ಇಷ್ಟವಿಲ್ಲ. ಸದ್ಯ ಕರ್ತವ್ಯ ನಿರ್ವಹಿಸುತ್ತಿರುವ ಕಡೆಗಳಲ್ಲಿಯೇ ಉದ್ಯೋಗ ಮುಂದುವರಿಸಲು ಅನುಮತಿ ನೀಡಬೇಕು. ಚಿಕ್ಕ ಮಕ್ಕಳು, ಅವಲಂಬಿತರನ್ನು ಬಿಟ್ಟು ದೂರದ ಕೊಳ್ಳೆಗಾಲ, ಗುಂಡ್ಲುಪೇಟೆ, ಹನೂರು ತಾಲ್ಲೂಕುಗಳಿಂದ ಚಾಮರಾಜನಗರಕ್ಕೆ ಬಂದು ಕೆಲಸ ಮಾಡಲು ಕಷ್ಟವಾಗುತ್ತದೆ ಎಂದು ಅಳಲು ತೋಡಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.