ಬೆಳಗಾವಿ: ‘ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಫಲ ಕೊಡಲಿಲ್ಲ ಎಂಬುದು ಕಾಂಗ್ರೆಸ್ ಶಾಸಕರಿಗೆ ಖಾತ್ರಿಯಾಗಿದೆ. ಈ ಯೋಜನೆಗಳ ಕುರಿತು ಸ್ವತಃ ಅವರಿಗೇ ಸಮಾಧಾನವಿಲ್ಲ’ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೇ ಹೇಳಬಹುದು. ಆದರೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದ್ದು, ಯಾವ ಕಾಮಗಾರಿಗೂ ಅನುದಾನ ಇಲ್ಲದಂತಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸದಂತೆ ಆ ಪಕ್ಷದ ಶಾಸಕರೇ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ’ ಎಂದರು.
‘ಕಾಂಗ್ರೆಸ್ನಲ್ಲಿ ಆರಂಭವಾಗಿರುವ ಒಳಜಗಳ, ಅವರ ಪಕ್ಷದ ಹಣೆಬರಹ. ನಾವೇಕೆ ಅದರ ಬಗ್ಗೆ ಚಿಂತಿಸಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಬಿಜೆಪಿಯಲ್ಲಿನ ಎಲ್ಲ ನಾಯಕರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನದ ಜತೆಗೆ, ಕಾಂಗ್ರೆಸ್ನಲ್ಲಿನ ಒಳಹೊಡೆತದಿಂದಲೂ ನನ್ನ ಗೆಲುವಿಗೆ ಅನುಕೂಲವಾಯಿತು’ ಎಂದು ನಕ್ಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.