ADVERTISEMENT

HDK ವಿರುದ್ಧ ಪ್ರಾಸಿಕ್ಯೂಷನ್; ರಾಜ್ಯಪಾಲರ ನಡೆ ಕಾದು ನೋಡುವೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 23:30 IST
Last Updated 8 ಆಗಸ್ಟ್ 2024, 23:30 IST
<div class="paragraphs"><p>ಡಿ.ಕೆ. ಶಿವಕುಮಾರ್ ಹಾಗೂ ಎಚ್‌.ಡಿ ಕುಮಾರಸ್ವಾಮಿ</p></div>

ಡಿ.ಕೆ. ಶಿವಕುಮಾರ್ ಹಾಗೂ ಎಚ್‌.ಡಿ ಕುಮಾರಸ್ವಾಮಿ

   

ಬೆಂಗಳೂರು: ‘ಎಚ್‌.ಡಿ. ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ್ದ ವಿಚಾರದಲ್ಲಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿರುವ ಪ್ರಸ್ತಾವದಲ್ಲಿ ರಾಜ್ಯಪಾಲರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆಂದು ಕಾದುನೋಡಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಲೋಕಾಯುಕ್ತ ಎಸ್‌ಐಟಿ ಅನುಮತಿ ಕೇಳಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆಯ ಬಳಿಕ ಲೋಕಾಯುಕ್ತ ತನಿಖೆ ಮಾಡಿ ಕುಮಾರಸ್ವಾಮಿ ಅವರ ವಿಚಾರಣೆಗೆ ರಾಜ್ಯಪಾಲರಿಂದ ಅನುಮತಿ ಕೇಳಿದೆ ಎಂಬ ಮಾಹಿತಿಯಿದೆ. ರಾಜ್ಯಪಾಲರು ಆ ಕಡತವನ್ನು ತಮ್ಮಲ್ಲೇ ಇರಿಸಿಕೊಂಡಿದ್ದಾರೆ ಎಂದೂ ಮಾಹಿತಿ ಸಿಕ್ಕಿದೆ’ ಎಂದರು.

ADVERTISEMENT

ಆರೋಪಕ್ಕೆ ದಾಖಲೆ ಎಲ್ಲಿವೆ?: ‘ನನ್ನ ಮೇಲೆ ಕುಮಾರಸ್ವಾಮಿ ಅನೇಕ ಆರೋಪಗಳನ್ನು ಮಾಡಿದ್ದಾರೆ. ಆ ಆರೋಪಗಳಿಗೆ ದಾಖಲೆಗಳು ಬೇಕಲ್ಲವೇ. ಅವರು ನನ್ನ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ಅವರ ಸಹೋದರನ ಆಸ್ತಿ ಹೇಗೆ ಬಂತು, ಎಲ್ಲಿಂದ ಬಂತು ಎಂಬುದನ್ನು ನಾನು ಬಿಚ್ಚಿಡಬೇಕಲ್ಲವೇ’ ಎಂದೂ ಪ್ರಶ್ನಿಸಿದರು.

‘ಹಿಂದುಳಿದ ವರ್ಗದ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೆ ಬಿಜೆಪಿ– ಜೆಡಿಎಸ್‌ನವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದ್ದರೂ ಬೇರೆಯವರ ತಟ್ಟೆ ನೋಡುತ್ತಿದ್ದಾರೆ. ಅವರ ಪಾದಯಾತ್ರೆಗೆ ಜನರಿಂದ ಸ್ಪಂದನೆಯಿಲ್ಲ. ಜೆಡಿಎಸ್‌ ಕಾರ್ಯಕರ್ತರೇ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.