ADVERTISEMENT

ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

ಪಿಟಿಐ
Published 18 ಮೇ 2024, 10:30 IST
Last Updated 18 ಮೇ 2024, 10:30 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ತುಮಕೂರು: ‘ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಎಲ್ಲವನ್ನೂ ನಿಯಂತ್ರಣದಲ್ಲೇ ಇಟ್ಟಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾನೂನು, ಸುವ್ಯವಸ್ಥೆ ನಿಯಂತ್ರಣದಲ್ಲಿ ಇದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಣ ಮಾಡುವ ಶಕ್ತಿ ಸರ್ಕಾರಕ್ಕಿದೆ. ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ’ ಎಂದರು.

ADVERTISEMENT

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ‘ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ವರದಿ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ನಾಲ್ಕು ತಿಂಗಳ ವರದಿ ಇಟ್ಟುಕೊಂಡು ವಿಶ್ಲೇಷಣೆ ಮಾಡಲಾಗದು. ಒಂದೊಂದು ಘಟನೆಗೂ ಪ್ರತ್ಯೇಕ ಕಾರಣಗಳು ಇರುತ್ತವೆ’ ಎಂದು ಹೇಳಿದರು.

‘ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ಜನರಿಗೆ ಗೊತ್ತಾಗುತ್ತದೆ’ ಎಂದು ತಿಳಿಸಿದರು.

ದೇವರಾಜೇಗೌಡ ಅವರಿಗೆ ₹100 ಕೋಟಿ ಆಮಿಷ ಒಡ್ಡಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ. ‘ನಾನು ಹೊರಗೆ ಬಂದರೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ’ ಎಂಬ ದೇವರಾಜೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಹಾಗಾದರೆ ಅವರು ಜೈಲಿನಲ್ಲೇ ಇರಬೇಕಾಗುತ್ತದೆ’ ಎಂದು ಮಾರ್ಮಿಕವಾಗಿ ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.