ಹಾಸನ: ‘ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡಲು ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸಲು ಕರ್ನಾಟಕ ದೇವಸ್ಥಾನ - ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕದ ಸಮನ್ವಯಕ, ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಮುಖ್ಯ ಆಯೋಜಕ ಚಂದ್ರ ಮೊಗವೀರ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿ ದೇವಸ್ಥಾನದ ಮುಂಭಾಗ ವಸ್ತ್ರ ಸಂಹಿತೆಯ ಫಲಕ ಹಾಕಲಾಗುವುದು. ಭಕ್ತರು ತುಂಡು ಬಟ್ಟೆ ಧರಿಸಿ ಬರುವ ಬದಲು, ಭಾರತೀಯ ಸಂಸ್ಕೃತಿಯನ್ನು ಅನುಸರಿಸಬೇಕು ಎಂಬ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.
‘ಮಹಿಳೆಯರು ಚೂಡಿದಾರ್, ಲಂಗ-ದಾವಣಿ, ಸಲ್ವಾರ್-ಕುರ್ತಾ ಅಥವಾ ಸೀರೆಯಂಥ ಪಾರಂಪರಿಕ ಸಾತ್ವಿಕ ದಿರಿಸು ಧರಿಸಬೇಕು. ಪುರುಷರು ಕುರ್ತಾ, ಧೋತಿ, ಲುಂಗಿ, ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್ ಹಾಕಬೇಕು. ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್ಲೆಸ್ ಡ್ರೆಸ್, ನೈಟ್ ಡ್ರೆಸ್ ಉಡುಪು ಧರಿಸಿ ಬರಬಾರದು’ ಎಂದು ಮನವಿ ಮಾಡಿದರು.
‘ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ, ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಬೇಕು ಎಂದು ರಾಜ್ಯದ ಧಾರ್ಮಿಕ ದತ್ತಿ ಖಾತೆ ಸಚಿವರಿಗೆ ಮನವಿ ನೀಡಲಾಗಿದೆ. ರಾಜ್ಯ ಧಾರ್ಮಿಕ ಪರಿಷತ್ನಲ್ಲಿ ಚರ್ಚಿಸಿ ನಿರ್ಣಯಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.