ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿದೇಶ ಪ್ರವಾಸಕ್ಕೆ ಇಲ್ಲಿನ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ (ಇ.ಡಿ. ನ್ಯಾಯಾಲಯ) ಸೋಮವಾರ ಅನುಮತಿ ನೀಡಿದೆ.
ದುಬೈಯಲ್ಲಿ ಇದೇ 29ರಿಂದ ಡಿಸೆಂಬರ್ 3ರ ವರೆಗೆ ನಡೆಯಲಿರುವ ವಾರ್ಷಿಕ ಅಂತರ ರಾಷ್ಟ್ರೀಯ ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಕಾಸ್ ದುಲ್ ಅವರು ಷರತ್ತುಬದ್ಧ ಅನುಮತಿ ನೀಡಿದರು. ‘ಆರೋಪಿ ವಿದೇಶಕ್ಕೆ ಪ್ರಯಾಣಿಸುವಾಗ ಯಾವುದೇ ಸಹ-ಆರೋಪಿಗಳನ್ನು ಸಂಪರ್ಕಿಸಲು ಪ್ರಯತ್ನಿಸಬಾರದು. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು’ ಎಂದೂ ನ್ಯಾಯಾಧೀಶರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.