ADVERTISEMENT

ಪಶ್ಚಿಮ ಘಟ್ಟ: 16,114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ; ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಜನಪ್ರತಿನಿಧಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 11:43 IST
Last Updated 19 ಸೆಪ್ಟೆಂಬರ್ 2024, 11:43 IST
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ   

ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2 ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರು, ಶಾಸಕರು ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ಶುಕ್ರವಾರ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದರು.

ADVERTISEMENT

ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16,114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದರು.

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ಸಂಪುಟ ಉಪಸಮಿತಿಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.

ವಿಶೇಷ ಪ್ಯಾಕೇಜ್ ಗೆ ಒತ್ತಾಯ:

ಈಗಾಗಲೇ ಇರುವ 16,114 ಚ.ಕಿ.ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ತೊಂದರೆ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ:

ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015 ರ ಸರ್ಕಾರದ ಆದೇಶ ಮತ್ತು ನಡಾವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು.

ರಾಜೇಗೌಡರ ಮನವಿ:

ಮೂರು ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಶೃಂಗೇರಿ ಶಾಸಕ ರಾಜೇಗೌಡ ಮನವಿ ಮಾಡಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದ ಶ್ರೇಯಸ್ ಪಟೇಲ್ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.