ಬೆಂಗಳೂರು: ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 38 ನಿವೃತ್ತ ಅಧಿಕಾರಿಗಳು, ನೌಕರರನ್ನು ಅವರು ನಿರ್ವಹಿಸುತ್ತಿದ್ದ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಆದೇಶ ಹೊರಡಿಸಿದೆ.
ಹಾಗೆಯೇ, ಕರ್ನಾಟಕ ತೋಟಗಾರಿಕೆ ಅಭಿವೃದ್ಧಿ ಏಜೆನ್ಸಿಯಲ್ಲಿ ಹೆಚ್ಚುವರಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ನಿವೃತ್ತ ಲೆಕ್ಕಾಧಿಕಾರಿ ಕೆ.ಆರ್. ರಾಮಮೂರ್ತಿ ಅವರನ್ನೂ ಬಿಡುಗಡೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ‘ಹೊರೆ’ ಆಗಿರುವ, ಗುತ್ತಿಗೆ– ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 370ಕ್ಕೂ ಹೆಚ್ಚು ನಿವೃತ್ತ ಸರ್ಕಾರಿ ಅಧಿಕಾರಿ, ನೌಕರರನ್ನು ತಕ್ಷಣದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈಚೆಗೆ ಸೂಚನೆ ನೀಡಿದ್ದರು.
ಈ ಇಲಾಖೆಗಳು ಮತ್ತು ಅವುಗಳ ಅಧೀನದಲ್ಲಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ, ನೌಕರರ ಪಟ್ಟಿಯ ಸಹಿತ ಟಿಪ್ಪಣಿ ಮೂಲಕ ನಿರ್ದೇಶನ ನೀಡಿದ್ದ ಅವರು, ಕೆಲಸದಿಂದ ಬಿಡಗಡೆ ಮಾಡಿದ ವರದಿಯನ್ನು ಸಲ್ಲಿಸುವಂತೆ ತಾಕೀತು ಮಾಡಿದ್ದರು. ಈ ಕುರಿತು ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.