ಬೆಂಗಳೂರು: ‘ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಯಾವ ಆಧಾರದಲ್ಲಿ ದಾಳಿ ನಡೆಸಿದ್ದಾರೆಂದು ನನಗೆ ಗೊತ್ತಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಆಪ್ತ ಸಹಾಯಕರು ನೀಡಿದ್ದ ಹೇಳಿಕೆಗಳ ಆಧಾರದಲ್ಲಿ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವ ಮಧ್ಯೆಯೇ ಈ ದಾಳಿ ನಡೆದಿದೆ’ ಎಂದರು.
‘ದಾಳಿ ನಡೆಸುವ ಬಗ್ಗೆ ಇಡಿ, ಸಿಬಿಐನವರು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವುದಿಲ್ಲ. ಹೀಗಾಗಿ, ದಾಳಿಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ ಎನ್ನುವ ಪ್ರಶ್ನೆಯೇ ಇಲ್ಲ. ಇಡಿ ದಾಳಿಯ ಕಾರಣಕ್ಕೆ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ಮತ್ತು ದದ್ದಲ್ ಅವರ ಪಾತ್ರವಿದೆಯೆಂದು ನಾವು ಊಹಿಸಲು ಆಗುವುದಿಲ್ಲ’ ಎಂದರು.
ಪದ್ಮನಾಭ್ ಮತ್ತು ಪರಶುರಾಮ್ ಅವರ ಮಾತುಕತೆಯ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್ಐಟಿ ತನಿಖೆ ನಡೆಸುತ್ತಿದೆ. ಬ್ಯಾಂಕ್ ವಂಚನೆಗಳ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಸಾರ್ವಜನಿಕರ ಗಮನಕ್ಕೆ ಬರುವ ಮಾಹಿತಿಗಳನ್ನು ಕೂಡ ಎಸ್ಐಟಿಯವರು ಗಮನಿಸುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.