ADVERTISEMENT

ಗೂಳಿಹಟ್ಟಿ ಶೇಖರ್‌ ಪಿಐಎಲ್‌ ವಜಾ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2023, 15:40 IST
Last Updated 21 ಡಿಸೆಂಬರ್ 2023, 15:40 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿಗಳ ವಂಚನೆ ನಡೆದಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ ರದ್ದುಪಡಿಸಬೇಕು’ ಎಂದು ಕೋರಿ ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಅಧಿಕಾರಿಗಳನ್ನು ಯಾವ ಸ್ಥಳಕ್ಕೆ ವರ್ಗಾಯಿಸಬೇಕು, ಯಾವ ಹುದ್ದೆಯಲ್ಲಿ ಉಳಿಸಿಕೊಳ್ಳಬೇಕು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟ ಅಧಿಕಾರ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ADVERTISEMENT

‘ಅಧಿಕಾರಿಗಳ ವಗಾವಣೆಗೆ ಅದರದ್ದೇ ಆದ ಪ್ರತ್ಯೇಕ ಮಾರ್ಗಸೂಚಿಗಳಿವೆ. ಈ ಪ್ರಕರಣದಲ್ಲಿ ಅರ್ಜಿದಾರರು ಮೂರನೇ ವ್ಯಕ್ತಿಯಾಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣವೇನು?:

‘ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಸರ್ಕಾರ ತನಿಖಾಧಿಕಾರಿಯ ವರ್ಗಾವಣೆ ಮಾಡಿದೆ. ಇದು ರಾಜಕೀಯ ಪ್ರೇರಿತವಾಗಿದ್ದು, ಪ್ರಕರಣದಲ್ಲಿ ಕೆಲವು ರಾಜಕೀಯ ಪ್ರಭಾವಿಗಳನ್ನು ರಕ್ಷಣೆ ಮಾಡುವ ಉದ್ದೇಶವಿದೆ’ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು.

‘ತನಿಖೆ ಪೂರ್ಣಗೊಂಡು ಅಂತಿಮ ವರದಿ ಸಲ್ಲಿಸುವವರೆಗೂ ಹುದ್ದೆಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಮತ್ತು ಇತರೆ ಸಿಬ್ಬಂದಿಯನ್ನು ನಿಗಮದಲ್ಲಿಯೇ ಉಳಿಸಿಕೊಳ್ಳಲು ನಿರ್ದೇಶಿಸಬೇಕು’ ಎಂದು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.