ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಮಾಡುವ ವಾಹನ ಚಾಲಕರ ಮತ್ತು ಸಹಾಯಕಿಯರಿಗೆ ಕನಿಷ್ಠ ₹26 ಸಾವಿರ ವೇತನವನ್ನು ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿಯ ಒಂದು ವಾಹನಕ್ಕೆ ಒಬ್ಬ ಚಾಲಕನನ್ನು ನೇಮಿಸಬೇಕು. ಕೆಲಸದ ಸಂದರ್ಭದಲ್ಲಿ ಮರಣ ಹೊಂದಿದರೇ ಚಾಲಕರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಗುರುತಿನ ಚೀಟಿ ವಿತರಿಸಬೇಕು. ಮಹಿಳಾ ಸಿಬ್ಬಂದಿಗೆ 6 ತಿಂಗಳ ಹೆರಿಗೆ ರಜೆ ನೀಡಬೇಕು. ತರಬೇತಿ ಪಡೆದ ಎಲ್ಲ ಸ್ವಚ್ಛ ವಾಹಿನಿಯ ಚಾಲಕರಿಗೆ ವಾಹನ ನೀಡಬೇಕು. ಕಸ ವಿಲೇವಾರಿ ತರಬೇತಿ ಪಡೆದವರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯ ಸಂಚಾಲಕರಾದ ಎಂ.ಬಿ. ನಾಡಗೌಡ, ಡಿ.ಎಂ. ಮಲಿಯಪ್ಪ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಗ್ರಾಮ ಪಂಚಾಯಿತಿ ಚಾಲಕರು ಹಾಗೂ ನೂರಾರು ಮಹಿಳಾ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.