ADVERTISEMENT

ಗ್ಯಾರಂಟಿ ಯೋಜನೆ: ಎತ್ತಿಗೆ ಜ್ವರ, ಎಮ್ಮೆಗೆ ಬರೆ...!

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 21:49 IST
Last Updated 25 ಮಾರ್ಚ್ 2024, 21:49 IST
siddaramaiah
siddaramaiah   

ಬೆಂಗಳೂರು: ‘ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸರ್ವಥಾ ಸಮರ್ಥನೀಯವಲ್ಲ’ ಎಂದು ಸಿದ್ದರಾಮಯ್ಯ ಪರ ವಕೀಲ ಕೆ.ರವಿವರ್ಮ ಕುಮಾರ್ ಹೈಕೋರ್ಟ್‌ಗೆ ಅರುಹಿದರು.

‘ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿ ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ.ಎಂ.ಶಂಕರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರವಿವರ್ಮ ಕುಮಾರ್ ವಾದ ಮುಂದುವರಿಸಿ, ‘ಅರ್ಜಿದಾರರ ಆರೋಪವನ್ನು ಗಮನಿಸಿದರೆ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ರೀತಿಯಂತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಹಣವನ್ನು ಬಳಸಲಾಗುತ್ತಿದೆಯೇ ಹೊರತು ಸಿದ್ದರಾಮಯ್ಯವರ ವೈಯಕ್ತಿಕ ಆದಾಯವನ್ನಲ್ಲ’ ಎಂದು ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿದರು.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಪರ ವಕೀಲರು ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಇದಕ್ಕೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸಿ’ ಎಂದು ಪ್ರತಿವಾದಿಗಳ ಪರ ವಕೀಲರಿಗೆ 15 ದಿನಗಳ ಕಾಲಾವಕಾಶ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಏನಿದು ಅರ್ಜಿ?: 'ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿ ಗೆದ್ದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.