ADVERTISEMENT

ಗಣೇಶೋತ್ಸವಕ್ಕೆ BESCOMನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ: ಹೀಗೆ ಅರ್ಜಿ ಸಲ್ಲಿಸಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 7:05 IST
Last Updated 4 ಸೆಪ್ಟೆಂಬರ್ 2024, 7:05 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ತಿಳಿಸಿದೆ.

'ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರ ಮಾಡಲು ಸಹಕಾರ ಬೆಸ್ಕಾಂ ಸಹಕಾರ ನೀಡಲಿದೆ. ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.

ತಾತ್ಕಾಲಿಕ ವಿದ್ಯುತ್ ಸಂಪರ್ಕಕಕ್ಕೆ ಅರ್ಜಿ ಸಲ್ಲಿಸುವುದು ಹೀಗೆ...
  • ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.

  • ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಥವಾ ಸಹಾಯಕ ಎಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಿಸಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.

  • ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.

  • ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

ಸುರಕ್ಷತಾ ಕ್ರಮಗಳು
  • ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.

  • ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.

  • ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯಬೇಡಿ.

  • ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟಬೇಡಿ.

  • ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರವಿರಲಿ. ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತಂದರೆ, ಅವರು ಅಗತ್ಯ ನೆರವು ಒದಗಿಸುತ್ತಾರೆ.

  • ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.

  • ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ 'ಡೇಂಜರ್ ಜೋನ್' ಎಂದು ಸೂಚಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.