ಬೆಂಗಳೂರು: ‘ಲೈಂಗಿಕ ಹಗರಣದ ಆರೋಪಿಗಳಾಗಿರುವ ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ರಾಜ್ಯ ಸರ್ಕಾರ ಕ್ಲೀನ್ಚಿಟ್ ನೀಡಲು ಯತ್ನಿಸುತ್ತಿದೆ’ ಎಂದು ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ಕಾನೂನು ಸಲಹೆಗಾರ, ಹೈಕೋರ್ಟ್ ವಕೀಲ ಬಾಲನ್ ಶುಕ್ರವಾರ ದೂರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಏನಾದರೂ ಅರೋಪಿಗಳಿಗೆ ಕ್ಲೀನ್ಚಿಟ್ ನೀಡಿದರೆ, ಕಾನೂನು ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.
‘ಹಾಸನ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮುನ್ನೂರಕ್ಕೂ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. ಪ್ರತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಬೇಕು. ಯಾವ ಹೋಟೆಲ್, ಮನೆಯಲ್ಲಿ ಹಾಗೂ ಯಾವ ರೆಸಾರ್ಟ್ನಲ್ಲಿ ಈ ವಿಡಿಯೊಗಳು ಚಿತ್ರೀಕರಣ ಮಾಡಲಾಗಿದೆ ಎಂಬುದನ್ನು ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.
ಒಕ್ಕೂಟದ ರಾಜ್ಯ ಸಂಚಾಲಕ ಹರಿರಾಮ್, ‘ಸಂತ್ರಸ್ತ ಮಹಿಳೆಯರು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿರುವ ಸಾಧ್ಯತೆ ಇದೆ. ಆದ್ದರಿಂದ, ಈ ಹಗರಣದಲ್ಲಿ ಯಾವ ಸಮುದಾಯದವರು ಎಷ್ಟು ಮಹಿಳೆಯರಿದ್ದಾರೆ. ಎಷ್ಟು ಜನ ಬಾಲಕಿಯರು ಇದ್ದಾರೆ ಎಂಬ ಮಾಹಿತಿ ಕಲೆಹಾಕಬೇಕಿದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆ (ಪೋಕ್ಸೊ ಕಾಯ್ದೆ), ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು’ ಎಂದರು.
ನಟ ಚೇತನ್, ಬಿ.ಆರ್. ಭಾಸ್ಕರ ಪ್ರಸಾದ್, ರಾಜಣ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.