ಬೆಂಗಳೂರು: ‘ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತಗಳಲ್ಲೂ ಮಧ್ಯ ಪ್ರವೇಶಿಸಲು ಆಗದು’ ಎಂದು ಹೈಕೋರ್ಟ್ ಖಡಕ್ ಅಬಿಪ್ರಾಯ ವ್ಯಕ್ತಪಡಿಸಿದೆ.
ರಾಸಾಯನಿಕ ಮತ್ತು ಸುಗಂಧ ದ್ರವ್ಯ ಪೂರೈಕೆಗೆ ಸಂಬಂಧಿಸಿದಂತೆ ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ’ (ಕೆಎಸ್ಡಿಎಲ್) ಕರೆದಿದ್ದ ಟೆಂಡರ್ ಪ್ರಶ್ನಿಸಿ ಬೆಂಗಳೂರಿನ ಎಸ್ಪಿ ಎಂಟರ್ ಪ್ರೈಸಸ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.
‘ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಅರ್ಜಿದಾರರನ್ನು ತಾಂತ್ರಿಕ ಬಿಡ್ ಹಂತದಲ್ಲೇ ತಿರಸ್ಕರಿಸಲಾಗಿದೆ. ತದನಂತರ ಯಶಸ್ವಿ ಬಿಡ್ಡರ್ಗೆ ಕಾರ್ಯಾದೇಶ ನೀಡಲಾಗಿದೆ. ಹಾಗಾಗಿ, ಈ ಹಂತದಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಲು ಆಗದು. ಬೇಕಿದ್ದರೆ ಮೇಲ್ಮನವಿ ಪ್ರಾಧಿಕಾರದ ಮುಂದೆ ನಿಮ್ಮ ಅಹವಾಲು ಸಲ್ಲಿಸಿ’ ಎಂದು ಅರ್ಜಿದಾರರಿಗೆ ಸೂಚಿಸಿದೆ.
‘ಕೋರ್ಟ್, ಟೆಂಡರ್ ಪ್ರಕ್ರಿಯೆಯ ಮೇಲೆ ನಿಗಾ ವಹಿಸಬೇಕು ಎಂಬುದು ಅರ್ಜಿದಾರರ ಕೋರಿಕೆ. ಆದರೆ, ನ್ಯಾಯಾಲಯ ಟೆಂಡರ್ ಪರಿಶೀಲನಾ ಸಮಿತಿಯ ಸ್ಥಾನದಲ್ಲಿ ಕುಳಿತು ಪ್ರತಿಯೊಂದು ಹಂತದಲ್ಲೂ ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿರುವ ನ್ಯಾಯಪೀಠ, ಅರ್ಜಿದಾರರ ಆಕ್ಷೇಪಣೆಗಳನ್ನು ಪುರಸ್ಕರಿಸಲು ನಿರಾಕರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.