ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯಕ್ಕೆ ಪ್ರೌಢಶಾಲಾ ಸಹ ಶಿಕ್ಷಕರನ್ನು ನೇಮಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅನುಮತಿ ನೀಡಿದೆ.
ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಕ್ಲಸ್ಟರ್ ಹೊರತಾದ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರಾಗಿ ಹಾಗೂ ಪರೀಕ್ಷೆಯ ಇತರೆ ಕಾರ್ಯಗಳಿಗೆ ನಿಯೋಜಿಸಬೇಕು. ಆಯಾ ವಿಷಯಗಳ ಶಿಕ್ಷಕರನ್ನು ಅದೇ ವಿಷಯದ ದಿನ ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಸೂಚಿಸಿದೆ.
ಪ್ರೌಢಶಾಲಾ ಶಿಕ್ಷಕರ ಕೊರತೆ ಇದ್ದ ಕೇಂದ್ರಗಳಲ್ಲಿ ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲು ಸಮ್ಮತಿ ನೀಡಿದೆ.
2023ರ ಮಾರ್ಚ್–ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದ ಮೇಲೆ 38 ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಹಾಗಾಗಿ, 2024ರ ಪರೀಕ್ಷೆಯಲ್ಲಿ ನಕಲು, ವ್ಯವಹಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ಪರೀಕ್ಷಾ ಕಾರ್ಯಕ್ಕೆ ಪ್ರೌಢಶಾಲಾ ಸಹ ಶಿಕ್ಷಕರ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲು ಈಚೆಗೆ ಸುತ್ತೋಲೆ ಹೊರಡಿಸಲಾಗಿತ್ತು.
ಈ ಕ್ರಮಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಕ್ರಮ ಸರಿಯಲ್ಲ; ಮರುಪರಿಶೀಲಿಸಬೇಕು ಎಂದು ವಿಧಾನಪರಿಷತ್ತಿನ ಸದಸ್ಯರಾದ ಪುಟ್ಟಣ್ಣ ಹಾಗೂ ಮರಿತಿಬ್ಬೇಗೌಡ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.