ADVERTISEMENT

ಕೋಲ್ಕತ್ತ ವೈದ್ಯರ ಧರಣಿಗೆ ಬೆಂಬಲ: ಅ.17ರಂದು ಆಸ್ಪತ್ರೆಗಳಲ್ಲಿ ಸೇವೆಗಳು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 23:37 IST
Last Updated 14 ಅಕ್ಟೋಬರ್ 2024, 23:37 IST
   

ಬೆಂಗಳೂರು: ಕೋಲ್ಕತ್ತದ ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕರ್ನಾಟಕ ಘಟಕ ನಿರ್ಧರಿಸಿದೆ.

ತುರ್ತು ಸೇವೆಗಳನ್ನು ಹೊರತುಪಡಿಸಿ ಬೇರೆ ಸೇವೆಗಳು ಇರುವುದಿಲ್ಲ. ಒಪಿಡಿ, ಶಸ್ತ್ರಚಿಕಿತ್ಸೆಗಳೂ ಇರುವುದಿಲ್ಲ ಎಂದು ತಿಳಿಸಿದೆ.

ಆರ್‌.ಜಿ. ಕರ್‌ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಿರುವುದು ಮತ್ತು ಆಸ್ಪತ್ರೆಯಲ್ಲಿ ಅಗತ್ಯ ಭದ್ರತಾ ಸಿಬ್ಬಂದಿಯ ಕೊರತೆ ಇರುವುದು ಕಂಡು ಬಂದಿದೆ. ಇದರಿಂದಾಗಿಯೇ ದುಷ್ಕರ್ಮಿಗಳು ಸುಲಭವಾಗಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ. ಕಾಲಮಿತಿಯಲ್ಲಿ ತನಿಖೆ ನಡೆಸಬೇಕು. ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಐಎಂಎ ಆಗ್ರಹಿಸಿದೆ.

ADVERTISEMENT

ವೈದ್ಯರ ಮೇಲೆ ಯಾವುದೇ ಹಿಂಸೆ ನಡೆಯದಂತೆ ನೀತಿ ರೂಪಿಸಬೇಕು. ಆಸ್ಪತ್ರೆಗಳಿಗೆ ರಕ್ಷಣೆ ನೀಡಲು ಈಗಿರುವ ಕಾಯ್ದೆಗೆ ತಿದ್ದುಪಡಿ ತರಬೇಕು. ವಿಮಾನ ನಿಲ್ದಾಣಗಳಲ್ಲಿ ನೀಡುವಷ್ಟೇ ಭದ್ರತೆಯನ್ನು ಆಸ್ಪತ್ರೆಗಳಲ್ಲಿಯೂ ನೀಡಬೇಕು. ಆಸ್ಪತ್ರೆಗಳನ್ನು ಸುರಕ್ಷಿತ ವಲಯ ಎಂದು ಘೋಷಿಸಬೇಕು. ಪ್ರತಿ ಹೆಜ್ಜೆಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಅಗತ್ಯ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಬೇಕು. ವಿಶ್ರಾಂತಿ ಕೊಠಡಿಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.