ಬೆಂಗಳೂರು: ‘ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ಹೆಸರನ್ನು ಪಡೆಯಬೇಕು’ ಎಂದು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2023ನೇ ಸಾಲಿನ ಪರೀಕ್ಷೆಯಲ್ಲಿ ನಗರದ ಐಎಎಸ್ ಬಾಬಾ ಸಂಸ್ಥೆಯಿಂದ ತರಬೇತಿ ಪಡೆದು ಕರ್ನಾಟಕದಿಂದ ಆಯ್ಕೆಯಾಗಿರುವ 30 ಅಭ್ಯರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ತಮಗೆ ಸಿಕ್ಕಿರುವ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳಬಾರದು. ಸಮಾಜದ ಒಳಿತಿಗೆ ಮೀಸಲಿಡಬೇಕು’ ಹೇಳಿದರು.
ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಎಸ್. ಮೋಹನ್ ಕುಮಾರ್ ಮಾತನಾಡಿ, ‘ದೇಶದಲ್ಲಿ ಸಂಸ್ಥೆಯಿಂದ ತರಬೇತಿ ಪಡೆದ 211ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದರು.
ಅಭ್ಯರ್ಥಿಗಳು ವೃತ್ತಿ ಜೀವನದಲ್ಲಿ ಯಾರಿಗೂ ಅಡಿಯಾಳಾಗಬಾರದು. ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ದೇಶವು ನಿಮ್ಮಿಂದ ಹೆಚ್ಚಿನ ನಿರೀಕ್ಷೆಯನ್ನು ಅಪೇಕ್ಷಿಸುತ್ತದೆ. ಸಾರ್ವಜನಿಕ ಸೇವೆಯಲ್ಲಿ ತೃಪ್ತಿಕರ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.
ಕಠಿಣ ಪರಿಶ್ರಮದಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಐಎಎಸ್ ಬಾಬಾ ಸಂಸ್ಥೆಗೆ ಪ್ರತಿ ವರ್ಷವೂ ಒಳ್ಳೆಯ ಫಲಿತಾಂಶ ಲಭಿಸುತ್ತಿದೆ. ಇದು ಕನ್ನಡಿಗರಿಂದ ಸ್ಥಾಪಿತವಾದ ಸಂಸ್ಥೆಯಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.