ಬೆಳಗಾವಿ: 'ಯೋಗ ಮಾಡುವುದರಿಂದ ನಮಗೆ ಮಾನಸಿಕ ಮತ್ತು ದೈಹಿಕವಾಗಿ ನೆಮ್ಮದಿ ಸಿಗುತ್ತದೆ. ಯೋಗಕ್ಕೆ ಹೆಚ್ಚಿನ ಮಹತ್ವ ಕೊಟ್ಟರೆ ಯುವಜನಾಂಗ ದಾರಿ ತಪ್ಪುವುದು ಕಡಿಮೆಯಾಗುತ್ತದೆ' ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ, ಸುದ್ದಿಗಾರರ ಜತೆ ಮಾತನಾಡಿದರು.
'ನರೇಂದ್ರ ಮೋದಿ ಪ್ರಧಾನಿಯಾದ ನಂತರ ಯೋಗಕ್ಕೆ ಹೆಚ್ಚಿನ ಮಹತ್ವ ಸಿಕ್ಕಿದೆ. ಇಂದು ಇಡೀ ವಿಶ್ವದಲ್ಲೇ ಯೋಗ ದಿನ ಆಚರಿಸುತ್ತಿರುವ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಇದು ಬಹಳ ಸಂತೋಷದ ಸಂಗತಿ.
ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗದಲ್ಲಿ ಭಾಗಿಯಾಗಬೇಕು' ಎಂದು ಕೋರಿದರು.
'ಯೋಗ ಈಗ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ಚೀನಾದಲ್ಲೂ ನಮ್ಮ ದೇಶದ ಯೋಗಪಟುಗಳು ಯೋಗ ಕಲಿಸುತ್ತಿದ್ದಾರೆ. ಇದು ದೇಶದ ಸಾಂಸ್ಕೃತಿಕ ಪರಂಪರೆಗೆ ಸಂದ ಗೌರವ' ಎಂದು ಶ್ಲಾಘಿಸಿದರು.
ಯೋಗ ದಿನಾಚರಣೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಗೈರಾದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, 'ಅಧಿಕಾರಿಗಳು ಏಕೆ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ವಿಚಾರಿಸುತ್ತೇನೆ. ಎಲ್ಲರೂ ಭಾಗಿಯಾದರೆ ಯೋಗಕ್ಕೆ ಹೆಚ್ಚಿನ ಮಹತ್ವ ಸಿಗುತ್ತದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಆಸಕ್ತಿ ತೋರಿದರೆ, ಅಧಿಕಾರಿಗಳು ಆಸಕ್ತಿ ತೋರುತ್ತಾರೆ. ಮುಖ್ಯಮಂತ್ರಿ ಯೋಗ ದಿನಾಚರಣೆಯಲ್ಲಿ ಭಾಗಿಯಾದರೆ ಸಾಲದು. ಯೋಗ ದಿನಾಚರಣೆಯಲ್ಲಿ ಕಡ್ಡಾಯವಾಗಿ ಭಾಗಿಯಾಗುವಂತೆ ಎಲ್ಲ ಅಧಿಕಾರಿಗಳಿಗೂ ಅವರು ನಿರ್ದೇಶನ ನೀಡಬೇಕು' ಎಂದರು.
'ಕೇಂದ್ರ ಸರ್ಕಾರದ ನಿರ್ದೇಶದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಆದರೆ, ರಾಜ್ಯ ಸರ್ಕಾರವೂ ಆಸಕ್ತಿ ವಹಿಸಿತ್ತಿಲ್ಲ' ಎಂದು ಶೆಟ್ಟರ್ ಬೇಸರ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.