ನವದೆಹಲಿ: ಕಾಂಗ್ರೆಸ್ ಪಕ್ಷವು ‘ಭಾರತ್ ನ್ಯಾಯ ಯಾತ್ರೆ’ಯನ್ನು ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಎಂದು ಗುರುವಾರ ಮರುನಾಮಕರಣ ಮಾಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜ.14ರಿಂದ ಮಣಿಪುರದ ಇಂಫಾಲ್ನಿಂದ ಮುಂಬೈವರೆಗೆ ಈ ಯಾತ್ರೆ ಕೈಗೊಳ್ಳಲಿದ್ದಾರೆ. ಈ ಯಾತ್ರೆಯು ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಂಚರಿಸಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆಯ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಈ ವಿಷಯ ತಿಳಿಸಿದರು.
ಯಾತ್ರೆಯಲ್ಲಿ ಭಾಗವಹಿಸಲು ‘ಇಂಡಿಯಾ’ ಒಕ್ಕೂಟದ ಎಲ್ಲ ನಾಯಕರನ್ನು ಪಕ್ಷ ಆಹ್ವಾನಿಸುತ್ತದೆ ಹಾಗೂ ಅವರಿಗೆ ಆಹ್ವಾನಗಳನ್ನು ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದರು.
‘ಭಾರತ್ ಜೋಡೋ ಯಾತ್ರೆಯು ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದ್ದು, ಅದೊಂದು ಬ್ರ್ಯಾಂಡ್ ಆಗಿದೆ ಎಂಬುದಾಗಿ ಸಭೆಯಲ್ಲಿ ಚರ್ಚೆಯಾಯಿತು. ಹಾಗಾಗಿ, ಯಾತ್ರೆಯ ಹೆಸರನ್ನು ಮರುನಾಮಕರಣ ಮಾಡಲು ನಿರ್ಧರಿಸಲಾಯಿತು. ಈ ಯಾತ್ರೆಯಿಂದ ರಾಜಕೀಯ ಪರಿವರ್ತನೆ ಆಗಲಿದೆ’ ಎಂದು ಜೈರಾಮ್ ರಮೇಶ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.