ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ–50 ರ ಸಮಾರೋಪ ಸಮಾರಂಭದ ಪ್ರಯುಕ್ತ 50 ಸಾಧಕಿಯರ ಕುರಿತು ತಲಾ 100 ಪುಟಗಳ 50 ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಪ್ರಕಟಿಸಲು ಸರ್ಕಾರ ತೀರ್ಮಾನಿಸಿದೆ.
ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು.
ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲು ತಜ್ಞರ ಸಮಿತಿ ರಚಿಸುವಂತೆ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದರು.
ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1 ರಂದು ಪ್ರತಿಮೆ ಅನಾವರಣ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ ಮತ್ತು ಅಧಿಕಾರಿಗಳು ಇದ್ದರು.
ಸಭೆಯ ಮುಖ್ಯಾಂಶಗಳು
* ಮನೆ– ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು ಮನವಿ ಮಾಡುವುದು.
* ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡುವುದು.
* ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಚುರಪಡಿಸುವುದು.
* ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆ ಕಾಮಗಾರಿ ಪ್ರಗತಿಯಲ್ಲಿದೆ. ಬಳ್ಳಾರಿಯಲ್ಲಿ ರಂಜಾನ್ ಸಾಬ್ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ. ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.