ADVERTISEMENT

ಸರ್ಕಾರ ಉರುಳಿಸಲು ₹1 ಸಾವಿರ ಕೋಟಿ ಮೀಸಲು ಆರೋಪ: ಯತ್ನಾಳ್ ಹೇಳಿಕೆಗೆ ಡಿಕೆಶಿ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಸೆಪ್ಟೆಂಬರ್ 2024, 8:48 IST
Last Updated 30 ಸೆಪ್ಟೆಂಬರ್ 2024, 8:48 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

-ಪ್ರಜಾವಾಣಿ ಚಿತ್ರ/ ಎಂ. ಎಸ್. ಮಂಜುನಾಥ್

ಬೆಂಗಳೂರು: ‘ರಾಜ್ಯ ಸರ್ಕಾರವನ್ನು ಉರುಳಿಸಲು ₹ 1 ಸಾವಿರ ಕೋಟಿ ಮೀಸಲಿಡಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆ ಬಗ್ಗೆ ಆದಾಯ ತೆರಿಗೆ (ಐಟಿ) ಇಲಾಖೆ ತನಿಖೆ ನಡೆಸಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

ADVERTISEMENT

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಮತ್ತು ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ಈ ವಿಚಾರವಾಗಿ ನಮ್ಮ ಕಾನೂನು ಸಲಹೆಗಾರರ ಬಳಿಯೂ ಚರ್ಚೆ ನಡೆಸಲಾಗುವುದು’ ಎಂದರು.

ಗೃಹ ಸಚಿವ ಜಿ. ಪರಮೇಶ್ವರ ಜೊತೆಗಿನ ಭೇಟಿ ವಿಚಾರವಾಗಿ ಪ್ರಕ್ರಿಯಿಸಿದ ಶಿವಕುಮಾರ್, ‘ಪರಮೇಶ್ವರ ಅವರನ್ನು ಭೇಟಿ ಮಾಡಿದ  ಸಂದರ್ಭದಲ್ಲಿ ನಾವು ರಾಜಕೀಯವಾಗಿ ಚರ್ಚೆ ಮಾಡಿಲ್ಲ’ ಎಂದರು.

‘ದಿನಾ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ಧಿ ಮಾಡಲು ನಾವು ಅಧಿಕಾರಕ್ಕೆ ಬಂದಿದ್ದೇವೆ. ನಾವು ಅಭಿವೃದ್ಧಿ ಮಾಡಬೇಕಲ್ಲವೇ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಲ್ಲವೇ. ನಾನು ಪರಮೇಶ್ವರ, ಸಿದ್ದರಾಮಯ್ಯ ಒಟ್ಟಿಗೆ ಇರುವುದಲ್ಲ. ನಾವು 136 ಶಾಸಕರೂ‌ ಒಗ್ಗಟ್ಟಾಗಿದ್ದೇವೆ’ ಎಂದರು.

ನನಗೂ ಅದಕ್ಕೂ ಸಂಬಂಧವಿಲ್ಲ: ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.