ಬೆಂಗಳೂರು: ‘ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಗರೇ, ನಿಮ್ಮ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲು ರಾಜೀನಾಮೆ ಪಡೆಯಿರಿ’ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ವಿಜಯೇಂದ್ರ ಅವರ ಮೇಲಿನ ಪ್ರಕರಣ ಇ.ಡಿ ಕಣ್ಣಿಗೆ ಬಿದ್ದಿಲ್ಲವೇ? ಅವರೇ ಸ್ವತಃ ಒಪ್ಪಿಕೊಂಡಿರುವಾಗ ಕ್ರಮ ತೆಗೆದುಕೊಳ್ಳಲು ತಡ ಏಕೆ’ ಎಂದು ಪ್ರಶ್ನಿಸಿದರು.
‘ಕೋಲ್ಕತ್ತ ಕಂಪನಿಯಿಂದ ₹ 12 ಕೋಟಿಗೂ ಹೆಚ್ಚು ಹಣ ವಿಜಯೇಂದ್ರ ಅವರಿಗೆ ಸಂದಾಯವಾಗಿದೆ. ಎಚ್ಡಿ
ಎಫ್ಸಿ ಬ್ಯಾಂಕಿನಲ್ಲಿ ಇರುವ ಖಾತೆ ಸಂಖ್ಯೆ 50100016772791 ಯಾರದ್ದು? ರಾಜಗರನಾ ಸೇಲ್ಸ್ ಪ್ರೈವೇಟ್ ಲಿಮಿಟೆಡ್, ನೌಟಂಕ್ ಪ್ರೈವೇಟ್ ಲಿಮಿಟೆಡ್, ಗಣ ನಾಯಕ ಕಮಾಡಿಟಿ ಟ್ರೇಡ್, ಜಗದಾಂಭ, ರೆಮ್ಯಾಕ್ ಡಿಸ್ಟ್ರಿಬ್ಯೂಟರ್ ಕಂಪನಿ, ಸಕಂಬಾರಿ, ಸ್ಟಾಟ್ರಜಿಕ್ ವಿನ್ ಫ್ರಾ, ವಿಎಸ್ಎಸ್ ಎಸ್ಟೇಟ್ ಕಂಪನಿಗಳು ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಕಂಪನಿಗಳಿಗೂ ನಿಮಗೂ ಏನೂ ಸಂಬಂಧ’ ಎಂದೂ ವಿಜಯೇಂದ್ರ ಅವರನ್ನು ಪ್ರಿಯಾಂಕ್ ಕೇಳಿದರು.
‘ವಿಜಯೇಂದ್ರ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಮ್ಮ ಮೇಲಿರುವ ಪ್ರಕರಣಗಳ ಮಾಹಿತಿ ನೀಡಿದ್ದಾರೆ. ಅವರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಎ, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ 2022ರ ಸೆ. 16ರಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಅವರಿಗೆ ಸಮನ್ಸ್ ಜಾರಿಯಾಗಿದೆ’ ಎಂದರು.
‘ಮೂರು ಕಡೆ ಸಭೆ ನಡೆಸಿ ವಿಜಯೇಂದ್ರ ಅವರ ನಾಯಕತ್ವವನ್ನು ಬಿಜೆಪಿ ನಾಯಕರೇ ಪ್ರಶ್ನೆ ಮಾಡಿದ್ದಾರೆ. ಅವರ ನಾಯಕತ್ವವನ್ನು ಯಾರೂ ಒಪ್ಪಿಕೊಂಡಿಲ್ಲ. ಸಿದ್ದರಾಮಯ್ಯ ಅವರ ಮೇಲೆ ದೂರು ನೀಡಿರುವ ಟಿ.ಜೆ. ಅಬ್ರಹಾಂ, ವಿಜಯೇಂದ್ರ ಮೇಲೆಯೂ ದೂರು ನೀಡಿದ್ದರೂ ಈವರೆಗೂ ಕ್ರಮ ಆಗಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.