ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನಕ್ಕಾಗಿ ಅಧಿಸೂಚನೆ ಹೊರಡಿಸಿರುವ ನೆಲಮಂಗಲ ತಾಲ್ಲೂಕಿನ ಜಮೀನುಗಳಲ್ಲೇ ಕೆಲವರು ಹೆಚ್ಚುವರಿ ಪರಿಹಾರಕ್ಕಾಗಿಯೇ ಗಿಡ– ಮರಗಳನ್ನು ನೆಡುತ್ತಿದ್ದು, ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಕೆಐಎಡಿಬಿ ಸಿಇಒ ಡಾ.ಎಂ.ಮಹೇಶ ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ನೆಲಮಂಗಲ ತಾಲ್ಲೂಕಿನ ಹನುಮಂತಪುರ, ಬಿದ್ಲೂರು, ಕೋಡಿಪಾಳ್ಯ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ಕಂಡುಬಂದಿದ್ದು, ನಿಯಮಗಳ ಪ್ರಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು, ಕಟ್ಟಡಗಳಿಗೆ ಮಾತ್ರ ಪರಿಹಾರ ನೀಡಲಾಗುವುದು. ಆದರೆ, ಕೆಲವೆಡೆ ಹೆಚ್ಚಿನ ಪರಿಹಾರಕ್ಕಾಗಿ ಬೇರೆ ಜಮೀನುಗಳಲ್ಲಿ ಬೆಳೆದ ಗಿಡಗಳು, ದೊಡ್ಡ ಮರಗಳನ್ನು ತಂದು ನೆಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಅದಕ್ಕಾಗಿ ತನಿಖೆಗೆ ಸೂಚಿಸಲಾಗಿದೆ. ತನಿಖಾ ತಂಡದಲ್ಲಿ ಕೆಐಎಡಿಬಿ ಮುಖ್ಯ ಎಂಜಿನಿಯರ್ ಇರುತ್ತಾರೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಅಥವಾ ಇಸ್ರೋದ ಸ್ಯಾಟಲೈಟ್ ಮ್ಯಾಪಿಂಗ್ ಆಧರಿಸಿ ಅಧಿಸೂಚಿತ ಜಮೀನುಗಳಿಗೆ ಪರಿಹಾರ ವಿತರಣೆ ಕಡ್ಡಾಯಗೊಳಿಸಲಾಗುವುದು. ಅಧಿಸೂಚನೆ ಹೊರಡಿಸಿದ ನಂತರ ಹೆಚ್ವಿನ ಪರಿಹಾರಕ್ಕಾಗಿ ಗಿಡ ತಂದು ನೆಡುವುದರ ಮೂಲಕ ಸಂಸ್ಥೆಗೆ ನಷ್ಟ ಉಂಟು ಮಾಡಿದರೆ ಸಂಬಂಧಪಟ್ಟ ವಿಶೇಷ ಭೂಸ್ವಾಧೀನಾಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.