ನವದೆಹಲಿ: ಜೆಡಿ(ಎಸ್)ನಿಂದ ಅಮಾನತುಗೊಂಡಿರುವ ಮಾಜಿ ಸಂಸದ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣಗೆ ಅಪಹರಣ ಪ್ರಕರಣದಲ್ಲಿ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಇದರಿಂದ ಭವಾನಿ ರೇವಣ್ಣ ಅವರು ನಿರಾಳರಾಗುವಂತಾಗಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
ವಿಚಾರಣೆ ನಡೆಸಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ, ರಾಜಕೀಯ ಕುಟುಂಬ ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಆದರೆ ಈ ಪ್ರಕರಣದಲ್ಲಿ ಅಂತಹ ಯಾವುದೇ ಅಂಶಗಳು ಕಾಣುತ್ತಿಲ್ಲ, ಒಂದು ವೇಳೆ ತನಿಖೆ ದಾರಿ ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು ಎಂದು ನ್ಯಾಯಪೀಠ ಹೇಳಿದೆ.
ಏನಿದು ಪ್ರಕರಣ?
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೊಗಳು ಕಳೆದ ಏಪ್ರಿಲ್ ತಿಂಗಳಲ್ಲಿ ಬಹಿರಂಗವಾಗಿದ್ದವು. ಒಂದು ವಿಡಿಯೊದಲ್ಲಿ ತನ್ನ ತಾಯಿಯ (ಸಂತ್ರಸ್ತೆ) ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಇವರ ಸಂಬಂಧಿ ಬಾಬು ವಿರುದ್ಧ ದೂರು ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.