ಬೆಂಗಳೂರು: ‘ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಕುರಿತು ಮಹಿಳೆಯರ ಅಭಿಪ್ರಾಯ ಪಡೆಯುವ ಜೊತೆಗೆ, ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಕುರಿತು ಪಕ್ಷದ ಹಿರಿಯ ನಾಯಕಿಯರಿಂದ ಸಲಹೆ ಪಡೆಯಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕಿಯರ ಜೊತೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.
‘ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ಜನರ ಭಾವನೆ ಏನಿದೆ? ನಾವು ಇಷ್ಟು ಉತ್ತಮ ಯೋಜನೆ ಕೊಟ್ಟಿದ್ದರೂ ಜನರ ನಿರೀಕ್ಷೆಗಳೇನು? ಎಂಬ ಕುರಿತು ಚರ್ಚಿಸಲು ಹಿರಿಯ ನಾಯಕಿಯರ ಸಭೆ ಕರೆಯಲಾಗಿತ್ತು. ಸುಮಾರು 40 ಮಂದಿ ನಾಯಕಿಯರು ತಮ್ಮ ಅನುಭವಗಳನ್ನು ಆಧರಿಸಿ, ಸಲಹೆ ನೀಡಿದ್ದಾರೆ‘ ಎಂದು ತಿಳಿಸಿದರು.
‘ಪಕ್ಷದ ಘಟಕಗಳಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವಂತೆ ಕೆಲವರು ಬೇಡಿಕೆ ಇಟ್ಟಿದ್ದಾರೆ. ನಮ್ಮ ಪಕ್ಷ ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೀಸಲಾತಿ ನೀಡಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಮಹಿಳಾ ಮೀಸಲಾತಿ ತರಲು ಹೋರಾಟ ಮಾಡುತ್ತಿದ್ದೇವೆ’ ಎಂದರು.
ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಜನಸ್ಪಂದನಾ ಕಾರ್ಯಕ್ರಮ ಮಾಡಿದಾಗ ಅಧಿಕಾರಿಗಳು ಹೋಗಿದ್ದರು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾನು ಜನಸಂಪರ್ಕ ಸಭೆ ಮಾಡಿದ್ದೇನೆಯೇ ಹೊರತು, ಮಾಜಿ ಸಂಸದರು ಯಾವುದೇ ಕಾರ್ಯಕ್ರಮ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.