ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿ. 29ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ಮುಂದಾಗಿದೆ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲು ಆಯೋಗದ ಸಭೆ ಗುರುವಾರ ನಡೆಯಿತು.
ಈ ಹುದ್ದೆಗಳ ನೇಮಕಾತಿಗೆ ಆಗಸ್ಟ್ 27ರಂದು ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆಪತ್ರಿಕೆ 1 ಮತ್ತು 2ರಲ್ಲಿನ ಪ್ರಶ್ನೆಗಳನ್ನು ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ ಮಾಡಿದಾಗ ಹಲವು ತಪ್ಪುಗಳು ನುಸುಳಿದ್ದವು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಈ ಬೇಡಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡಪರ ಸಂಘಟನೆಗಳೂ ದನಿಗೂಡಿಸಿದ್ದವು.
ಹೀಗಾಗಿ, ಎರಡು ತಿಂಗಳ ಒಳಗೆ ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಎಸ್ಸಿಗೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿ ಸೂಚನೆ ನೀಡಿದ ನಂತರ ಆಯೋಗದ ಮೂರು ಸಭೆಗಳು ನಡೆದರೂ ಮರು ಪರೀಕ್ಷೆ ದಿನಾಂಕ ನಿಗದಿ ಆಗಿರಲಿಲ್ಲ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವಂತೆ ಕೆಲವು ಸದಸ್ಯರು ಪಟ್ಟು ಹಿಡಿದಿದ್ದರು ಎಂದು ಕೆಪಿಎಸ್ಸಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.