ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 5, 8, 9 ಮತ್ತು 11ನೇ ತರಗತಿಗಳಿಗೆ ಪರೀಕ್ಷೆ ನಿಗದಿ ಮಾಡಿದ್ದರ ಹಿಂದೆ ಪ್ರಶ್ನೆಪತ್ರಿಕೆ ಮಾಫಿಯಾ ಕೆಲಸ ಮಾಡಿದೆ ಎಂದು ಕರ್ನಾಟಕ ಖಾಸಗಿ ಶಾಲಾ ಕಾಲೇಜು ಪೋಷಕ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.
ಪರೀಕ್ಷೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇದು ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆ ಎಂದು ಹೇಳಿದೆ. ಸಂವಿಧಾನಬದ್ಧ ಮೂಲಭೂತ ಹಕ್ಕು ಮತ್ತು ಶಿಕ್ಷಣ ಕಾಯ್ದೆಯ ಅರಿವಿಲ್ಲದ ಅಧಿಕಾರಿಗಳು ಹಣದ ಆಸೆಗಾಗಿ ಪ್ರಶ್ನೆಪತ್ರಿಕೆ ಮುದ್ರಣ ಮಾಫಿಯಾ ಜತೆ ಕೈಜೋಡಿಸಿ, ಎಲ್ಲಾ ಗೊಂದಲಕ್ಕೆ ಕಾರಣರಾಗಿದ್ದಾರೆ. ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಗಳು ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆದಿದೆ ಸಮಿತಿ ಅಧ್ಯಕ್ಷ ಬಿ.ಎನ್.ಯೋಗಾನಂದ ದೂರಿದ್ದಾರೆ.
ಅಧಿಕಾರಿಗಳ ಕಾನೂನು ಬಾಹಿರ ನಿರ್ಧಾರಗಳಿಂದಾಗಿ ಲಕ್ಷಾಂತರ ಮಕ್ಕಳು ಮತ್ತು ಪೋಷಕರು ಸಂಕಷ್ಟ ಅನುಭವಿಸಿದ್ದಾರೆ. ಒತ್ತಡಕ್ಕೆ ಸಿಲುಕಿದ್ದಾರೆ. ಅದಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಪ್ರಶ್ನೆಪತ್ರಿಕೆಗಳಿಗೆ ಮಾಡಿದ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು. ಸಮಗ್ರ ವಿಚಾರಣೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.