ADVERTISEMENT

ರಾಜ್ಯದಲ್ಲಿ ಸದ್ಯಕ್ಕಿಲ್ಲ ಹೊಸ ವಿವಿ: ಸುಧಾಕರ್

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 15:34 IST
Last Updated 23 ಜೂನ್ 2023, 15:34 IST
   

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಯಾವುದೇ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡುವುದಿಲ್ಲ. ಇರುವ ವ್ಯವಸ್ಥೆಯನ್ನೇ ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್‌ ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಹಲವು ವಿಶ್ವವಿದ್ಯಾಲಯಗಳು ಅಸ್ತಿತ್ವಕ್ಕೆ ಬಂದಿವೆ. ಅವುಗಳಿಗೆ ಅಗತ್ಯವಾದ ಹಣಕಾಸಿನ ನೆರವು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಆಸಕ್ತಿ ತೋರಿಲ್ಲ. ಇದರಿಂದ ಹೊಸ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿವೆ. ಹಲವು ಕುಲಪತಿಗಳು ಬಾಡಿಗೆ ಕಾರು ಬಳಸುತ್ತಿದ್ದಾರೆ. ಸಿಬ್ಬಂದಿ ಕೊರತೆ ಇದೆ. ಕಟ್ಟಡಗಳಿಲ್ಲದೆ ಪರಿತಪಿಸುವಂತಾಗಿದೆ. ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ವಿಶ್ವವಿದ್ಯಾಲಯದ ಸ್ಥಾನ ನೀಡಿದ್ದರು. ಆದರೆ, ಹಣವನ್ನೇ ನೀಡಿಲ್ಲ. ಮುಂದಿನ ಬಜೆಟ್‌ನಲ್ಲಿ ಸೂಕ್ತ ಅನುದಾನ ಒದಗಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ 32 ಸರ್ಕಾರಿ ವಿಶ್ವವಿದ್ಯಾಲಯಗಳು, 3,417 ಸಂಯೋಜಿತ ಕಾಲೇಜುಗಳು, 3.50 ಲಕ್ಷ ವಿದ್ಯಾರ್ಥಿಗಳು ಇದ್ದು ಉನ್ನತ ಶಿಕ್ಷಣ ಬಲವರ್ಧನೆಗೆ ಶ್ರಮಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿ ಸ್ಥಿತಿಗತಿ ಕುರಿತು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳಿಂದ ಮಾಹಿತಿ ಕೇಳಲಾಗಿದೆ. ಸಮಗ್ರ ವಿವರ ಪಡೆಯಲು ಇನ್ನಷ್ಟು ಸಮಯ ಬೇಕಿದೆ. ವಿಸ್ತೃತ ಚರ್ಚೆಯ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.