ಬೆಂಗಳೂರು: ವಿಧಾನ ಪರಿಷತ್ನ ಆರು ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯಗೊಂಡಿದ್ದು, ಅಂತಿಮವಾಗಿ 78 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಬಂಡಾಯ ಎದುರಿಸುತ್ತಿವೆ.
ಒಟ್ಟು 12 ಅಭ್ಯರ್ಥಿಗಳು ಸೋಮವಾರ ನಾಮಪತ್ರ ಹಿಂಪಡೆದಿದ್ದಾರೆ. ಒಬ್ಬ ಮಹಿಳೆ ಮತ್ತು 77 ಪುರುಷರು ಕಣದಲ್ಲಿ ಉಳಿದಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಮೇಶ್ ಶೆಟ್ಟಿ ಸೋಮವಾರ ನಾಮಪತ್ರ ಹಿಂಪಡೆದರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಮನವೊಲಿಕೆಗೆ ಮಣಿದ ರಮೇಶ್ ಶೆಟ್ಟಿ, ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆದರು.
ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ನಾಮಪತ್ರ ಸಲ್ಲಿಸಿದ್ದ ಎಸ್.ಪಿ. ದಿನೇಶ್ ಕಣದಲ್ಲಿ ಮುಂದುವರಿದಿದ್ದಾರೆ. ಬಿಜೆಪಿ ಡಾ. ಧನಂಜಯ ಸರ್ಜಿ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಕಣಕ್ಕಿಳಿದಿದ್ದ ಮಾಜಿ ಶಾಸಕ ಕೆ. ರಘುಪತಿ ಭಟ್ ಕೂಡ ಸ್ಪರ್ಧೆಯಲ್ಲಿ ಉಳಿದಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುರೇಶ್ ಸಜ್ಜನ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮನವೊಲಿಕೆ ಫಲಿಸಿದ್ದು, ಸೋಮವಾರ ನಾಮಪತ್ರ ಹಿಂಪಡೆದರು.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅತ್ಯಧಿಕ 19 ಅಭ್ಯರ್ಥಿಗಳಿದ್ದಾರೆ. ಬೆಂಗಳೂರು ಪದವೀಧರರು ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳಲ್ಲಿ ತಲಾ 15, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 10, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.