ADVERTISEMENT

ನಾಗಮಂಗಲ ಗಲಭೆ ಪ್ರಕರಣ | ಕ‌ರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ: ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಸೆಪ್ಟೆಂಬರ್ 2024, 6:33 IST
Last Updated 13 ಸೆಪ್ಟೆಂಬರ್ 2024, 6:33 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ಉತ್ತರ ಪ್ರದೇಶ ಮಾದರಿಯ ಬುಲ್ಡೋಜರ್‌ ಕಾರ್ಯಾಚರಣೆ ಕರ್ನಾಟಕದಲ್ಲೂ ಬೇಕಿದೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿರುವ ಕೋಮು ಗಲಭೆಯಲ್ಲಿ ಅಂಗಡಿ, ಮುಂಗಟ್ಟುಗಳು, ಸರಕು ಸೇರಿದಂತೆ ಒಟ್ಟು ಸುಮಾರು ₹25 ಕೋಟಿಗೂ ಹೆಚ್ಚು ಮೊತ್ತದ ಆಸ್ತಿ–ಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಲ್ಲು ತೂರಾಟ, ಪೆಟ್ರೋಲ್‌ ಬಾಂಬ್‌ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿರುವ ಪುಂಡರನ್ನು ಪತ್ತೆ ಹಚ್ಚಿ, ಅವರ ಮನೆಗಳ ಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್‌ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣ ವಿರಾಮ ಇಡಲು ಸಾಧ್ಯ ಎಂದು ಅಶೋಕ ಕಿಡಿಕಾರಿದ್ದಾರೆ.

ADVERTISEMENT

ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಇಂತಹ ಪೂರ್ವ ನಿಯೋಜಿತ ಕೋಮು ಗಲಭೆಗಳನ್ನು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ ಎಂದು ಅಶೋಕ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.