ಬೆಂಗಳೂರು: ರಾಜ್ಯದಲ್ಲಿ ನಡೆಯುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯಕ್ಕೆ ಮುನ್ನಾದಿನವಾದ ಗುರುವಾರ ವಿವಿಧ ಪಕ್ಷಗಳ ಪ್ರಮುಖ ಅಭ್ಯರ್ಥಿಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯಿತು.
ಏಳು ಮಹಿಳೆಯರು ಸೇರಿದಂತೆ ಒಂದೇ ದಿನ 90 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಈ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದವರ ಒಟ್ಟು ಸಂಖ್ಯೆ 241 ತಲುಪಿದೆ. ಏ. 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.
ಶಿವಮೊಗ್ಗದಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸುವ ಮೊದಲು ನಡೆಸಿದ ಮೆರವಣಿಗೆ ಬಿಜೆಪಿ–ಜೆಡಿಎಸ್ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯಿತು. ಯಡಿಯೂರಪ್ಪ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕರಾದ ಸಿ.ಟಿ. ರವಿ, ಕುಮಾರ್ ಬಂಗಾರಪ್ಪ ಮತ್ತಿತರರರು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಬೀದರ್ನಲ್ಲಿ ಕೇಂದ್ರ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬಾಗಲಕೋಟೆಯಲ್ಲಿ ಪಿ.ಸಿ. ಗದ್ದಿಗೌಡರ್, ಧಾರವಾಡದಲ್ಲಿ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಶ್ರೀ, ದಾವಣಗೆರೆಯಲ್ಲಿ ಕಾಂಗ್ರೆಸ್ನ ಪ್ರಭಾ ಮಲ್ಲಿಕಾರ್ಜುನ್, ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಕಾರ್ಯಕರ್ತರ ಜೈಕಾರದ ಮಧ್ಯೆ ನಾಮಪತ್ರ ಸಲ್ಲಿಸಿದರು. ಗದ್ದಿಗೌಡರ್ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.