ಚಿಕ್ಕಮಗಳೂರು: 15 ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲವೂ ಗೊತ್ತಿದೆ. ಬಿಜೆಪಿ ಮುಖಂಡರನ್ನು ಕೇಳಿ ಬೆಲೆ ಏರಿಕೆ ಅಥವಾ ಇಳಿಕೆ ಮಾಡು ಅವಶ್ಯಕತೆ ಇಲ್ಲ' ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿದರು.
ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಸಣ್ಣ ವಿಷಯ. ಬಿಜೆಪಿಯವರಿಗೆ ಬೇರೆ ಏನೂ ಕೆಲಸ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದಾರೆ' ಎಂದರು.
'ಸುತ್ತಮುತ್ತಲ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ ಆಸೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಏನು ಮಾಡುತ್ತಿದ್ದರು' ಎಂದು ಪ್ರಶ್ನಿಸಿದರು.
'ಗ್ಯಾರಂಟಿ ಯೋಜನೆಗಳಿಗೆ ₹60 ಸಾವಿರ ಕೋಟಿ ಬೇಕಿದೆ. ತೈಲ ಬೆಲೆ ಏರಿಕೆಯಿಂದ ಗರಿಷ್ಠ ₹3 ಸಾವಿರ ಕೋಟಿ ನಿರೀಕ್ಷೆ ಮಾಡಲಾಗಿದೆ. ಈ ಹಣದಿಂದ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲಾಗುತ್ತಿದೆ ಎಂಬುದು ಸುಳ್ಳು' ಎಂದರು.
'ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ ಇನ್ನೊಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.