ADVERTISEMENT

ತನಿಖೆಗೆ ಅಸಹಕಾರ: ಎಸ್‌ಐಟಿ ಅಧಿಕಾರಿಗಳಿಗೆ ಪ್ರಜ್ವಲ್ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2024, 22:54 IST
Last Updated 1 ಜೂನ್ 2024, 22:54 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿಶೇಷ ತನಿಖಾ ದಳದ (ಎಸ್‌ಐಟಿ) ವಿಚಾರಣೆಗೆ ಅಸಹಕಾರ ತೋರುತ್ತಿದ್ದು, ಹೊರಗೆ ಬಂದ ಕೂಡಲೇ ನೋಡಿಕೊಳ್ಳುವುದಾಗಿ ಅಧಿಕಾರಿಗಳನ್ನು ಬೆದರಿಸುತ್ತಿದ್ದಾರೆಂದು ಗೊತ್ತಾಗಿದೆ.

ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯ ಅದರ ಸೆಲ್‌ನಲ್ಲಿ ಪ್ರಜ್ವಲ್ ಅವರನ್ನು ಎಸ್‌ಐಟಿ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. ಆದರೆ, ತಮ್ಮ ಮೇಲಿನ ಅತ್ಯಾಚಾರ ಆರೋಪಗಳನ್ನು ಅವರು ನಿರಾಕರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

‘ನನ್ನ ವಿರುದ್ಧ ರಾಜಕೀಯ ಪಿತೂರಿಯಿಂದ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಾನು ಯಾವುದೇ ತಪ್ಪು ಮಾಡಿಲ್ಲ. ನಾಲ್ಕು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಲು ಹಿಂದಿರುವ ಕಾರಣ ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಪ್ರಜ್ವಲ್ ಮನವಿ ಮಾಡಿರುವುದಾಗಿ ಗೊತ್ತಾಗಿದೆ. ನಮ್ಮ ಮನೆಯಲ್ಲಿ ಹಲವು ಮಂದಿ ಕೆಲಸ ಮಾಡುತ್ತಿದ್ದರು. ನನಗೆ ಆ ಕೆಲಸಗಾರರ ಬಗ್ಗೆ ಮಾಹಿತಿ ಗೊತ್ತಿಲ್ಲ. ತಿರುಚಿದ ವಿಡಿಯೊಗಳನ್ನು ಹರಿಬಿಟ್ಟು ತೇತೋವಧೆ ಮಾಡಿದ್ದಾರೆ. ಈ ವಿಡಿಯೊಗಳ ಹಿಂದಿರುವ ಕಾರ್ತಿಕ್ ಸೇರಿದಂತೆ ಇತರರನ್ನು ಬಂಧಿಸಿ ವಿಚಾರಿಸಿದರೆ ಸತ್ಯ ಗೊತ್ತಾಲಿದೆ’ ಎಂದು ಪ್ರಜ್ವಲ್‌ ಹೇಳಿರುವುದಾಗಿ ತಿಳಿದು ಬಂದಿದೆ.

‘ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್‌ ಅವರನ್ನು ಆರು ದಿನ ವಿಚಾರಣೆ ಸಲುವಾಗಿ ಎಸ್‌ಐಟಿ ವಶಕ್ಕೆ ಪಡೆದಿದ್ದು, ಮೊದಲ ದಿನದ ವಿಚಾರಣೆಗೆ ನಿರೀಕ್ಷಿತ ರೀತಿಯಲ್ಲಿ ಅವರು ಸಹಕರಿಸಿಲ್ಲ. ಎರಡು ದಿನಗಳ ವಿಚಾರಣೆ ಬಳಿಕ ಅವರನ್ನು ಘಟನಾ ಸ್ಥಳಗಳ ಮಹಜರು ಸಲುವಾಗಿ ಹಾಸನಕ್ಕೆ ಕರೆದೊಯ್ಯುಲು ಅಧಿಕಾರಿಗಳು ಮುಂದಾಗಿದ್ದಾರೆ’ ಎಂದು ಮೂಲಗಳು ಹೇಳಿವೆ.

ಬೆದರಿಕೆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ

'ಪ್ರಜ್ಚಲ್ ರೇವಣ್ಣ ಅವರು ತನಿಖೆ ಮಾಡುವವರನ್ನೇ ಬೆದರಿಸುವಂತೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಮುಂದಿನ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ನೀಡಲಾಗುವುದು. ಏಕಾಏಕಿ ಪ್ರಕರಣ ದಾಖಲಿಸಿದರೆ, ನಾವೇ ದುರುದ್ದೇಶದಿಂದ ಪ್ರಕರಣ ದಾಖಲಿಸಿದಂತಾಗುತ್ತದೆ. ಹೀಗಾಗಿ, ನ್ಯಾಯಾಲಯದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಎಸ್ಐಟಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.